ಬೆಂಗಳೂರು: 2019ರ ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವುದು ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದೊಡ್ಡ ಸವಾಲಾಗಿದೆ.
ತಳ ಮಟ್ಟದಿಂದ ಪಕ್ಷ ಬಲವರ್ಧನೆಗಾಗಿ ಕಾಂಗ್ರೆಸ್ ಶಾಸಕರುಗಳಿಗೆ ಶಿವಕುಮಾರ್ ಮತ್ತಷ್ಟು ಜವಾಬ್ದಾರಿ ನೀಡಿದ್ದಾರೆ. ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು ತಮ್ಮ ಕ್ಷೇತ್ರಗಳ ಜೊತೆಗೆ ಕಾಂಗ್ರೆಸೇತರ ಶಾಸಕರ ಎರಡು ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡು ಪಕ್ಷ ಸಂಘಟನೆ ನೀಡುವಂತೆ ಸೂಚಿಸಿದ್ದಾರೆ.
ಶಾಸಕರಿಗೆ ತಮ್ಮ ಕ್ಷೇತ್ರದ ಜೊತೆಗೆ ತಮ್ಮ ಪಕ್ಕದ ಕ್ಷೇತ್ರದ ಹೊಣೆಗಾರಿಕೆ ಕೂಡ ನೀಡಲಾಗಿದೆ, ಎಂಎಲ್ ಸಿ ಗಳಿಗೆ 2 ಕ್ಷೇತ್ರ ನೀಡಲಾಗುವುದು, ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬೆಳೆಸುವುದು ಅವರ ಜವಾಬ್ದಾರಿಯಾಗಿರುತ್ತದೆ.
ಆದರೆ ಶಿವಕುಮಾರ್ ನಿರ್ಧಾರದಿಂದ ಶಾಸಕರು ಅಸಮಾಧಾನಗೊಂಡಿದ್ದಾರೆ. ಯಾವುದೇ ಎಂಎಲ್ ಎ ಅಥವಾ ಎಂಎಲ್ ಸಿ ಯಾಗಲಿ ಒಂದಕ್ಕಿಂತ ಹೆಚ್ಚಿನ ಕ್ಷೇತ್ರದ ಜವಾಬ್ದಾರಿ ತೆಗೆದುಕೊಳ್ಳುವುದು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಹೆಸರು ಕೇಳಿ ಬರುತ್ತಿದ್ದಂತೆ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದಾಗಿ ಶಿವಕುಮಾರ್ ಹೇಳುತ್ತಾ ಬಂದಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ, ಶಿವಕುಮಾರ್ ಅವರು ಪಕ್ಷದ ಹಿರಿಯ ಶಾಸಕರು ಮತ್ತು ಮಾಜಿ ಶಾಸಕರು, ಮಂಡಳಿ ಅಧ್ಯಕ್ಷರನ್ನು ಭೇಟಿ ಮಾಡಿದ್ದರು.
ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಜವಾಬ್ದಾರಿಯನ್ನು ಆಯಾಯಾ ಕ್ಷೇತ್ರದ ನಾಯಕರಿಗೆ ನೀಡುವುದು ಇದರ ಉದ್ದೇಶವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ 224 ಕ್ಷೇತ್ರಗಳ ಪ್ರವಾಸ ಮಾಡಿ ಅಲ್ಲಿನ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಸಮಾಲೋಚಿಸುವುದಾಗಿ ಹೇಳಿದ್ದಾರೆ. 2023 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ, ಅದಕ್ಕೂ ಮುನ್ನ ಬಿಬಿಎಂಪಿ ಚುನಾವಣೆ ಎದುರಾಗಲಿದೆ.
.
Advertisement