ಹಾಸನ: ಜೆಡಿಎಸ್ ಮತಗಳನ್ನು ಬಿಜೆಪಿ ಅಭ್ಯರ್ಥಿಗಳಿಗೆ ವರ್ಗಾಯಿಸಿದ ಕಾರಣ ಆರ್ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಇಂದು ಅರಸಿಕೇರೆ ತಾಲ್ಲೂಕಿನ ಹೊರಿಮಂಗಲಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಪ ಚುನಾವಣೆಯಲ್ಲಿ ಆಂತರಿಕ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಕಳೆದುಕೊಂಡಿದ್ದು, ಬಿಜೆಪಿ ಅದರ ರಾಜಕೀಯ ಲಾಭ ಪಡೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಇನ್ನು ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ನಾಯಕರು ಚುನಾವಣೆಗೂ ಮುನ್ನವೇ ಬಿಜೆಪಿಗೆ ಶರಣಾಗಿದ್ದಾರೆ ಎಂದರು.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಸ್ಟಾರ್ ಹೋಟೆಲ್ಗಳಲ್ಲಿ ಹೆಚ್ಚು ಸಮಯ ಕಳೆದರು ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಯಿತು ಎಂದು ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿವೃದ್ಧಿ ಕಾರ್ಯಗಳ ಸೋಗಿನಲ್ಲಿ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
Advertisement