ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್‌ನ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ

ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳಿದ್ದರಿಂದ ಮುಸ್ಲಿಂ ಮತಗಳು ವಿಭಜನೆಯಾಗಿದ್ದವು.
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳಿದ್ದರಿಂದ ಮುಸ್ಲಿಂ ಮತಗಳು ವಿಭಜನೆಯಾಗಿದ್ದವು. ಇದೀಗ ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಎಂದಿದ್ದು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಕಣ್ಣನ್ನು ಮತ್ತೆ ಕೆಂಪಗಾಗಿಸಿದೆ.

ತಮ್ಮದು ಅಳುಬುರಕ ರಾಜಕಾರಣ ಎಂದು ಟೀಕಿಸಿರುವ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್‌ನ ಸರ್ವನಾಶ ಸಿದ್ದರಾಮಯ್ಯರಿಂದಲೇ ಎಂದು ತಿರುಗೇಟು ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಮೊದಲು ಚಿಲ್ಲರೆ ರಾಜಕಾರಣ ಮಾಡುವುದದನ್ನು ಬಿಡಬೇಕು ಎಂದು ಮೂದಲಿಸಿದರು.

ಸಿದ್ದರಾಮಯ್ಯ ಇತಿಹಾಸ ಅವಲೋಕಿಸಿದರೆ ಅವರ ಸಂಸ್ಕೃತಿ ಏನೆಂದು ಗೊತ್ತಾಗಲಿದೆ. ಯಾವ ಪಕ್ಷದಿಂದ ಬೆಳೆದು ಬಂದರೋ ಈಗ ಅದೇ ಪಕ್ಷದ ಸರ್ವನಾಶದ ಬಗ್ಗೆ ಮಾತಾನಾಡುತ್ತಿದ್ದಾರೆ. ಇವತ್ತು ಕಾಂಗ್ರೆಸ್ ಸಿದ್ದರಾಮಯ್ಯನಿಂದಲೇ ಸರ್ವನಾಶ ವಾಗಲಿದೆ ಎಂದು ಭವಿಷ್ಯ ನುಡಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, 
ಯಾವುದೇ ಜನಪ್ರತಿನಿಧಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹೆದರುವ ಅವಶ್ಯಕತೆ ಇಲ್ಲ. ನಾವು ಸರಿಯಾಗಿ ಕೆಲಸ ಮಾಡಿದ್ದೇ ಆದರೆ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ದಾಳಿ ನಡೆದರೆ ಅದನ್ನು ರಾಜಕೀಯ ಪಿತೂರಿ ಎನ್ನುವುದು ಸಹಜ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಕುಟುಕಿದ ಕುಮಾರಸ್ವಾಮಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಕ್ಕೆ ಜಯ ದೊರಕಲಿದೆ. ಹೀಗಾಗಿ ಸತ್ಯ ಇನ್ನೂ ಹೊರಗೆ ಬರಲಿದೆ. ಸಂವಿಧಾನದಲ್ಲಿ ಸ್ವಾಯತ್ತ ಸಂಸ್ಥೆಗಳು ಗೌರವ ಉಳಿಸುತ್ತವೆ ಎಂಬುದು ತಮ್ಮ ಅಭಿಪ್ರಾಯ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com