ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ತಮ್ಮ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿದ್ದ ಪೋಸ್ಟ್ ಗೆ ಡಿಕೆ ರವಿ ಅವರ ಪತ್ನಿ ಕುಸುಮಾ ಹನಮಂತರಾಯಪ್ಪ ತಿರುಗೇಟು ನೀಡಿದ್ದು, ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂದು ಹೇಳಿದ್ದಾರೆ.
ಕುಸುಮಾ ಕಾಂಗ್ರೆಸ್ ಸೇರಿರುವ ಫೋಟೋ ಹಾಕಿ ಪ್ರಶಾಂತ್ ಸಂಬರಗಿ ಫೇಸ್ ಬುಕ್ ಪೋಸ್ಟ್ ಒಂದನ್ನು ಹಾಕಿದ್ದರು. ಕುಸುಮಾ ಅವರ ದುರಾದೃಷ್ಟ ಡಿಕೆರವಿ ಅವರಿಂದ ಡಿಕೆ ಶಿವಕುಮಾರ್ ಅವರಿಗೆ ವರ್ಗಾವಣೆಯಾಗಿದೆ ಎಂದು ವ್ಯಂಗ್ಯ ಮಾಡಿದ್ದರು.
ಇದಕ್ಕೆ ಫೇಸ್ ಬುಕ್ ನಲ್ಲೇ ತಿರುಗೇಟು ನೀಡಿರುವ ಕುಸುಮಾ ಅವರು, ಯಾರನ್ನೋ ಮೆಚ್ಚಿಸಲು ನನ್ನ ಅದೃಷ್ಟ ವಿಷಯ ಪ್ರಸ್ತಾಪ ಬೇಡ, ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂದು ಹೇಳಿದ್ದಾರೆ.
ಈ ಕುರಿತಂತೆ ಫೇಸ್ ಬುಕ್ ನಲ್ಲಿ ಕಿಡಿಕಾರಿರುವ ಕುಸುಮಾ ಅವರು, 'ಸಹೋದರ ಪ್ರಶಾಂತ್ ಸಂಬರಗಿಯವರಿಗೆ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು. ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ. ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಹೆಣ್ಣು ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ luck ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಬರೆದಿದ್ದಾರೆ.
Advertisement