ನವದೆಹಲಿ: ರಾಜ್ಯದಲ್ಲಿ ಇದೀಗ ಉಪ ಚುನಾವಣೆಯ ಕಾವು ರಂಗೇರುತ್ತಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಾಯಕರು ಪ್ರಚಾರ, ಪರಸ್ಪರ ದೋಷಾರೋಪದಲ್ಲಿ ತೊಡಗಿದ್ದಾರೆ.
2018ರಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ದೂರಾಗಿವೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಇತ್ತೀಚಿನ ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಹಿಂಸಾಚಾರದ ಬಗ್ಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ನಿಜವಾದ ಚಿತ್ರಣ ಇದೀಗ ಬಯಲಾಗಿದೆ. ಕಾಂಗ್ರೆಸ್ ಮುಖಂಡರು ನಾಗರಿಕರ ರಕ್ಷಣೆಗೆ ಇಲ್ಲ. ದಾಳಿಯಲ್ಲಿ ಅವರೇ ಮುಖ್ಯ ಅಪರಾಧಿಗಳು. ಈಗ ಜನರೇ ಯೋಚನೆ ಮಾಡಲಿ, ಬೆಂಗಳೂರು ನಗರದ ನಾಗರಿಕರಿಗೆ ಕಾಂಗ್ರೆಸ್ ಸುರಕ್ಷಿತವಲ್ಲ,ಈ ಚುನಾವಣೆಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ನಿನ್ನೆ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ ಅವರು ನಾಮಪತ್ರ ಸಲ್ಲಿಸಿ ಹೊರಬಂದ ನಂತರ ಸುದ್ದಿಗಾರರರೊಂದಿಗೆ ಮಾತನಾಡುತ್ತಾ ಕುಮಾರಸ್ವಾಮಿ ಈ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿ ಗಲಭೆ ಸೃಷ್ಟಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಹಿಂದೆ ಎಸ್ ಡಿಪಿಐ ಜೊತೆ ಕಾಂಗ್ರೆಸ್ ಕೂಡ ಶಾಮೀಲಾಗಿದೆ, ನಗರದ ಮಾಜಿ ಮೇಯರ್ ಸಂಪತ್ ರಾಜ್ ಮುಖ್ಯ ಆರೋಪಿ ಎಂದು ಸಿಸಿಬಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದ್ದಾರೆ.
Advertisement