ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ರಾಜಕೀಯ ಪಿತೂರಿಯಾಗಿದ್ದು, ಕಾಂಗ್ರೆಸ್ ಪಕ್ಷ ಯಾವುದೇ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಗಲಭೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮಾಜಿ ಮೇಯರ್ ಸಂಪತ್ ರಾಜ್ ಹೆಸರನ್ನು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಸಂಪತ್ ರಾಜ್ ಅವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಿವಕುಮಾರ್ ಅವರು, ಚಾರ್ಚ್ ಶೀಟ್ ನಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಉಲ್ಲೇಖ ಮಾಡಿರುವುದು ರಾಜಕೀಯ ಪಿತೂರಿಯಾಗಿದ್ದು, ಯಾವುದೇ ಆರೋಪವನ್ನು ನಾವು ಒಪ್ಪುವುದಿಲ್ಲ. ಪಕ್ಷ ಯಾವುದೇ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ. ಗಲಭೆ ಪ್ರಕರಣದಲ್ಲಿ ಯಾವುದೇ ಕಾಂಗ್ರೆಸ್ ನಾಯಕರೂ ಭಾಗಿಯಾಗಿಲ್ಲ. ಬಿಜೆಪಿಯೇ ಗಲಭೆಗೆ ಜವಾಬ್ದಾರಿ. ಪೊಲೀಸ್ ಅಧಿಕಾರಿಗಳು ಸರ್ಕಾರ ಏಜೆಂಟ್ ಗಳಂತೆ ವರ್ತಿಸುತ್ತಿದ್ದಾರೆ. ನಾವು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಇದರ ವಿರುದ್ಧ ಹೋರಾಟ ನಡೆಸುತ್ತೇವೆಂದು ತಿಳಿಸಿದ್ದಾರೆ.
ಎಲ್ಲಾ ಕಾಂಗ್ರೆಸ್ ನಾಯಕರೂ ಮುಗ್ಧರಾಗಿದ್ದು, ನಾವು ಯಾವುದೇ ನಾಯಕರನ್ನೂ ಪಕ್ಷದಿಂದ ಉಚ್ಛಾಟಿಸುವುದಿಲ್ಲ. ಪ್ರಕರಣ ಸಂಬಂಧ ಮಾಜಿ ಗೃಹ ಸಚಿವ ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಮತ್ತು ಜಿ ಪರಮೇಶ್ವರ್ ಮತ್ತು ಹಿರಿಯ ನಾಯಕರಾದ ಕೃಷ್ಣ ಬೈರೇಗೌಡ ಮತ್ತು ಬಿಕೆ ಹರಿಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ. ಘಟನೆ ವೇಳೆ ಏನಾಯಿತು ಎಂಬುದರ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳುತ್ತೇವೆ. ಅಖಂಡ ಶ್ರೀನಿವಾಸ ಮೂರ್ತಿಯವರ ಆಗ್ರಹ ವೈಯಕ್ತಿಕ ರಾಜಕೀಯ ಅಜೆಂಡಾವನ್ನು ಹೊಂದಿದೆ ಎಂದಿದ್ದಾರೆ.
Advertisement