ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ನಟ ನೆನಪಿರಲಿ ಪ್ರೇಮ್ ಅವರನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಇಂದು ನಾಗರಬಾವಿಯಲ್ಲಿರುವ ಪ್ರೇಮ್ ನಿವಾಸಕ್ಕೆ ಭೇಟಿಕೊಟ್ಟ ಡಿಕೆಶಿ, ಪ್ರೇಮ್ ದಂಪತಿ ಆರ್ ಆರ್ ನಗರ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದು, ನಟ ಪ್ರೇಮ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಸಿನಿಮಾ ನಿರ್ಮಾಪಕರೂ ಆಗಿರುವ ಮುನಿರತ್ನ ಬಿಜೆಪಿಯಿಂದ ಈ ಬಾರಿ ಉಪಚುನಾವಣೆಗೆ ಸ್ಪರ್ಧೆ ಮಾಡಿದ್ದು, ಮುನಿರತ್ನ ಪರ ದರ್ಶನ್, ಯಶ್ ಸೇರಿದಂತೆ ಹಲವಾರು ನಟ-ನಟಿಯರು ಸ್ಟಾರ್ ಕ್ಯಾಂಪೇನರ್ ಆಗಿ ಪ್ರಚಾರಕ್ಕೆ ಬರುವ ಸಾಧ್ಯತೆಗಳಿವೆ.
ಹೀಗಾಗಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುಸುಮಾ ಪರ ಪ್ರಚಾರಕ್ಕೆ ಬರುವಂತೆ ನಟ ಪ್ರೇಮ್ ಅವರನ್ನು ಡಿ.ಕೆ. ಶಿವಕುಮಾರ್ ಅವರು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ನಟಿ ಮಾಲಾಶ್ರೀ, ಸಾಧು ಕೋಕಿಲ, ಉಮಾಶ್ರೀ, ಜಯಮಾಲಾ ಸೇರಿದಂತೆ ಚಿತ್ರರಂಗದ ಹಲವು ಪ್ರಮುಖರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಹೀಗಾಗಿ ಪ್ರೇಮ್ ಅವರನ್ನೂ ಸ್ಟಾರ್ ಕ್ಯಾಂಪೇನರ್ ಎಂದು ಭಾಗಿಯಾಗಲು ಮನವಿ ಮಾಡಿದ್ದಾರೆ ಎನ್ನಲಾಗಿದೆ.
Advertisement