ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಕೆಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ, ಹಾಲಿ ಸಂಸದ ಕಾರ್ತಿ ಚಿದಂಬರಂ ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾರ್ತಿ ಚಿದಂಬರಂ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಸಿಬಿಐ ದಾಳಿ ಕುರಿತಂತೆಯೂ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಕಾರ್ತಿ ಚಿದಂಬರಂ ಅವರ ನಿವಾಸದ ಮೇಲೆ 2017 ರಲ್ಲಿ ಸಿಬಿಐ ದಾಳಿ ನಡೆಸಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಹಾಗೂ ಕಾರ್ತಿ ಚಿದಂಬರಂ ಸಿಬಿಐ ದಾಳಿ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದೂ ಉನ್ನತ ಮೂಲಗಳು ಹೇಳಿವೆ.
ಡಿಕೆ ಶಿವಕುಮಾರ್ ಬೇಟಿ ಬಳಿಕ ತಮಿಳುನಾಡು ಎಐಸಿಸಿ ಉಸ್ತುವಾರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾರ್ತಿ ಚಿದಂಬರಂ ಅವರು, ಮಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರೊಂದಿಗೆ ಫಲದಾಯಕ ಮಾತುಕತೆಗಳನ್ನು ನಡೆಸಲಾಯಿತುಎಂದು ಹೇಳಿದ್ದಾರೆ.
ಕಾರ್ತಿ ಚಿದಂಬರಂ ಅವರು ಲೋಕಸಭಾ ಸಂಸದರಾಗಿದ್ದು, ನನ್ನ ಆತ್ಮೀಯ ಸ್ನೇಹಿತರಾಗಿದ್ದಾರೆ. ಕಾರ್ತಿ ಚಿದಂಬರಂ ಅವರ ಭೇಟಿ ಯಾವುದೇ ರಾಜಕೀಯ ಉದ್ದೇಶಗಳಿಂದ ಕೂಡಿಲ್ಲ. ಇದೊಂದು ಸೌಜನ್ಯದ ಭೇಟಿಯಾಗಿದೆ. ನಾವಿಬ್ಬರೂ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Advertisement