ಕುಮಾರಸ್ವಾಮಿ
ಕುಮಾರಸ್ವಾಮಿ

ಸರ್ಕಾರ ಮಾರ್ಗಸೂಚಿಯಲ್ಲಿ ಜನರ ಜೀವ ಉಳಿಸಲು ಏನು ಕ್ರಮಕೈಗೊಂಡಿದೆ ಎಂದು ಹೇಳಿಲ್ಲ: ಕುಮಾರಸ್ವಾಮಿ

ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆಯೇ ಹೊರತು ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹೇಳಿಲ್ಲ...
Published on

ಬೆಂಗಳೂರು: ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆಯೇ ಹೊರತು ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹೇಳಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟ್ವೀಟ್ ಮೂಲಕ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿರುವ ಹೆಚ್.ಡಿ.ಕೆ, ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್‌ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈವರೆಗೆ ಏನು ಮಾಡಿತ್ತು? ಕೋವಿಡ್‌ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನು? ಎಂದು ಕೇಳಿದ್ದಾರೆ.

ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನುಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್‌ಡಿಸಿವಿರ್‌ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇಲ್ಲವೋ ಎಂಬುದನ್ನು ಸರ್ಕಾರ ಮೊದಲು ಸ್ಪಷ್ಟಪಡಿಸಬೇಕು. ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com