ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಬರುವುದು ಖಚಿತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಬಹುತೇಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈಗಾಗಲೇ ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸುವುದರೊಂದಿಗೆ ಶುಭಾರಂಭವಾಗಿದೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದೇವೆ ಎಂದು ಅಭಿಪ್ರಾಯಪಟ್ಟರು.
ನಂತರ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದರೂ ಎಂಇಎಸ್ ಪುಂಡಾಟಿಕೆ ಮೆರೆದಿದೆ. ಅವರಿಗೆ ಬೇರೆ ಕೆಲಸವಿಲ್ಲ, ಎಂಇಎಸ್ ಬಂದ್ ಗೆ ಕರೆ ನೀಡಿದ್ದರೂ ಬೆಳಗಾವಿ ಜನ ಅದನ್ನು ತಿರಸ್ಕರಿಸಿದ್ದಾರೆ. ಎಂಇಎಸ್ ಜೀವಂತವಾಗಿದ್ದೇವೆ ಎಂದು ತೋರ್ಪಡಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
Advertisement