ಕೆಜಿಎಫ್: ರಾಜ್ಯದ ಜನರ ಹಿತಾಸಕ್ತಿ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೆಜಿಎಫ್ ನಲ್ಲಿ ಅಗತ್ಯವಿರುವವರಿಗೆ ದಿನಸಿ ಕಿಟ್ ವಿತರಿಸಿ ನಂತರ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸರ್ಕಾರಕ್ಕೆ ತಜ್ಞರು ಕೋವಿಡ್ ಎರಡನೇ ಅಲೆ ಬಗ್ಗೆ ಮೊದಲೆ ಎಚ್ಚರಿಕೆ ನೀಡಿದ್ದರು, ಆದರೆ ಸರ್ಕಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ, ವೆಂಟಿಲೇಟರ್, ಬೆಡ್, ಮತ್ತು ಆಕ್ಸಿಜನ್ ಸೌಲಭ್ಯಗಳನ್ನು ಸರ್ಕಾರ ಹೆಚ್ಚಿಸಲಿಲ್ಲ, ಹೀಗಾಗಿ ಸಾವಿನ ಸಂಖ್ಯೆ ಏರುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ಅಥವಾ ಕರ್ನಾಟಕದ ಯಾವುದೇ ನಗರಗಳಲ್ಲಿ ಹಾಸಿಗೆಗಳಿಲ್ಲ, ಮತ್ತು ಈ ವೈಫಲ್ಯದ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಜೆಪಿ ನಾಯಕರಿಂದ ಬೆಡ್ ಬ್ಲಾಕಿಂಗ್ ನಡೆಯುತ್ತಿರುವುದು ದುರಾದೃಷ್ಟಕರ ಎಂದರು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಕೊಲಾರದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಕೆಲ ಕಾಲ ಗೊಂದಲ ಏರ್ಪಟ್ಟಿತ್ತು. ಸಾಮಾಜಿಕ ಅಂತರ ಕಾಪಾಡುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸಿದರು. ಕೆಜಿಎಫ್ ಮುನಿಸಿಪಾಲಿಟಿ ಮೈದಾನದಲ್ಲಿ ಹಲವು ಮಂದಿ ಜಮಾಯಾಸಿದ್ದರು. ಕಾಂಗ್ರೆಸ್ ನಾಯಕ ಜಯಪಾಲ್ ತಮ್ಮ ಬೆಂಬಲಿಗರೊಂದಿಗೆ ಮೈದಾನಕ್ಕೆ ತೆರಳಲು ಆಗಮಿಸಿದರು, ಆದರೆ ಪೊಲೀಸರು ಅವರಿಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
Advertisement