ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ.
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನಿಸುತ್ತಿದೆ. ಆಡಳಿತಾಧಿಕಾರಿಗಳ ಅವಧಿಯನ್ನು ಇನ್ನೂ ಆರು ತಿಂಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.
ಉಪ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸರ್ಕಾರ ಚುನಾವಣೆ ನಡೆಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ ತೋರುತ್ತಿರುವುದು ಇದೇ ಮೊದಲಲ್ಲ, ಈ ಹಿಂದೆ ತಾಲ್ಲೂಕು ಪಂಚಾಯತಿಗಳನ್ನು ರದ್ದುಪಡಿಸಿ ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಎರಡು ಹಂತದ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಅದು ಪ್ರಸ್ತಾಪಿಸಿತ್ತು, ಇದರಿಂದ ಗ್ರಾಮೀಣ ಆಡಳಿತವನ್ನು ಸುಗಮಗೊಳಿಸಲು ಸಹಾಯವಾಗುವುದಾಗಿ ಸರ್ಕಾರ ತಿಳಿಸಿತ್ತು ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಮೇ ತಿಂಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು, ಆದರೆ ಸಾಂಕ್ರಾಮಿಕ ರೋಗದಿಂದಾಗಿ ಸೆಪ್ಟೆಂಬರ್ಗೆ ಮುಂದೂಡಲಾಯಿತು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021 ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕರಿಸಿ, ಸ್ಥಳೀಯ ಸಂಸ್ಥೆಗಳಿಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ನಿರ್ಧರಿಸಲು ಅವಕಾಶ ನೀಡಿತು.
ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಸಹ ಮುಂದೂಡಲು ಯತ್ನಿಸುತ್ತಿದೆ. ಡಿಲಿಮಿಟೇಶನ್ ಇಲ್ಲದೇ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್ ನಲ್ಲಿ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ.
Advertisement