'ಯಾರೋ ತರ್ಲೆ ಮಾಡಿದ ಕೆಲಸ'; ಸುಳ್ಯ ಕೋರ್ಟ್ ಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್; ಇಷ್ಟಕ್ಕೂ ಏನಿದು ಪ್ರಕರಣ?

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿದರು.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಮಂಗಳೂರು: ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿದರು.

ಈ ಹಿಂದೆ ಡಿಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ದಾಖಲಿಸಲಾಗಿದ್ದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ. 

ಈ ಕುರಿತಂತೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಯಾವುದೋ ವ್ಯಕ್ತಿ ಕರೆ ಮಾಡಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ನಂತರ ಆತ ಆ ಅಧಿಕಾರಿಗಳಿಗೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿತ್ತು. ಮೊದಲ ಬಾರಿಗೆ ನನಗೆ ತಿಳಿದಿರಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ‌ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್‌ನಲ್ಲಿ ಹಾಕ್ತೇವೆ ಎಂದು ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ ಎಂದು  ಹೇಳಿದರು.

ಏನಿದು ಪ್ರಕರಣ?
2016ರ ಫೆಬ್ರವರಿ 28ರಂದು ಸುಳ್ಯ ತಾಲೂಕಿನ‌ ಬೆಳ್ಳಾರೆ ನಿವಾಸಿ, ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ, ಸಾಯಿ ಗಿರಿಧರ್ ರೈ ತನ್ನೂರಿನಲ್ಲಿ ನಿರಂತರವಾಗಿ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್‌ಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಪರಸ್ಪರ ಅವ್ಯಾಚ್ಯ ಶಬ್ಧಗಳ ಬಳಕೆ ಕೂಡಾ ಮಾಡಿದ್ದರು. ಈದಾದ ಬಳಿಕ ಡಿ. ಕೆ. ಶಿವಕುಮಾರ್ ಮೆಸ್ಕಾಂ ಎಂಡಿ ಮೂಲಕ ಅಂದಿನ ಸುಳ್ಯ ಪ್ರಭಾರ ಎಇಇ ಹರೀಶ್ ನಾಯಕ್ ಎಂಬುವವರು ಸಾಯಿ ಗಿರಿಧರ್ ರೈ ವಿರುದ್ಧ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಸದ್ಯಕ್ಕೆ ಸುಳ್ಯ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಪ್ರಮುಖ ಸಾಕ್ಷಿಯನ್ನಾಗಿ ಡಿ. ಕೆ. ಶಿವಕುಮಾರ್‌ರನ್ನು ಕೋರ್ಟ್ ಪರಿಗಣಿಸಿತ್ತು.

ಹೋರಾಟ, ಪ್ರತಿಭಟನೆ ನಮ್ಮ ಹಕ್ಕು
ಇದೇ ವೇಳೆ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಡಿಕೆಶಿ, 'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಂತ್ವನ ಹೇಳಲು ಬಂದವರ ಬಂಧನ, ರೈತರ ಮೇಲೆ ಕಾರು ಹತ್ತಿಸಿದವರ ಬಂಧನವೇಕಿಲ್ಲ
ಅಂತೆಯೇ ಉತ್ತರಪ್ರದೇಶದ ಲಖಿಮ್‌ಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರ್ ಹರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಪುತ್ರನ ಅಟ್ಟಹಾಸದ ಕುರಿತು ಮಾತನಾಡಿದ ಶಿವಕುಮಾರ್, ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಇನ್ನೂ ಬಂಧಿಸಿಲ್ಲ, ಸಂಬಂಧ ಪಟ್ಟ ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ?..

ಮೃತ ರೈತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಬಂದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಸರ್ಕಾರದ ಕ್ರಮ ಖಂಡನೀಯ. ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com