ಸತ್ಯಾಂಶ ಮುಚ್ಚಿಟ್ಟು ಮಧ್ಯಪ್ರದೇಶ- ಕರ್ನಾಟಕ ಸರ್ಕಾರಗಳು ಜನರನ್ನು ದಾರಿ ತಪ್ಪಿಸುತ್ತಿವೆ: ಡಿಕೆಶಿ ಕಿಡಿ

ಕೊರೋನಾ ನಿಗ್ರಹ ವಿಚಾರದಲ್ಲಿ ಕರ್ನಾಟಕ ಮತ್ತು ಮಧ್ಯ ಪ್ರದೇಶ ಸರ್ಕಾರಗಳು ಸತ್ಯಾಂಶ ಮುಚ್ಚಿಟ್ಟು, ಜನರನ್ನು ದಾರಿತಪ್ಪಿಸುತ್ತಿವೆ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ದೂರಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ನವದೆಹಲಿ: ಕೊರೋನಾ ನಿಗ್ರಹ ವಿಚಾರದಲ್ಲಿ ಕರ್ನಾಟಕ ಮತ್ತು ಮಧ್ಯ ಪ್ರದೇಶ ಸರ್ಕಾರಗಳು ಸತ್ಯಾಂಶ ಮುಚ್ಚಿಟ್ಟು, ಜನರನ್ನು ದಾರಿತಪ್ಪಿಸುತ್ತಿವೆ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ದೂರಿದ್ದಾರೆ.

ಸದ್ಯ ದೆಹಲಿ ಪ್ರವಾಸದಲ್ಲಿರುವ ಶಿವಕುಮಾರ್ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಉಭಯ ರಾಜ್ಯಗಳಲ್ಲಿನ ಕೊರೋನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು.

ಕೊರೋನ ಸಾವಿನ ಪ್ರಮಾಣ ಕುರಿತು ಸರ್ಕಾರಗಳು ಸುಳ್ಳು ಲೆಕ್ಕ ನೀಡುತ್ತಿವೆ. ಸರ್ಕಾರ ಹೇಳುತ್ತಿರುವ ಅಂಕಿ-ಅಂಶಕ್ಕೂ ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಸಂಖ್ಯೆಗೂ ಅಜಗಜಾಂತರವಿದೆ. ಕೋವಿಡ್ ನಿಂದ ಸತ್ತವರ ಮಾಹಿತಿಯನ್ನು ಸ್ಮಶಾನ, ಚಿತಾಗಾರಗಳಿಂದ ಪಡೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶವನ್ನು ಶಿವಕುಮಾರ್ ಅವರು ಗಮನಕ್ಕೆ ತಂದರು.

ಬೆಂಗಳೂರು ಹಾಗೂ ಕರ್ನಾಟಕ ಮೆಡಿಕಲ್ ಟೂರಿಸಂ, ಐಟಿ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಆದರೆ ಬಿಜೆಪಿ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಜಾಗತಿಕ ಮಟ್ಟದಲ್ಲಿ ರಾಜ್ಯದ ಘನತೆ ಕಡಿಮೆಯಾಗಿದೆ . ಕೆಲವು ದೇಶಗಳು ಇಲ್ಲಿಂದ ಹೋಗುವವರಿಗೆ ನಿರ್ಬಂಧ ಹೇರಿವೆ. ಇಲ್ಲಿನ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದರು.

ಕೋವಿಡ್ ಸಮಯದಲ್ಲಿ ಬಿಜೆಪಿಯ ಸ್ವಾರ್ಥ ರಾಜಕಾರಣ, ದುರಾಡಳಿತ, ಭ್ರಷ್ಟಾಚಾರದಿಂದ ರೈತರು, ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಅವರಿಗೆ ಸರ್ಕಾರದಿಂದ ಸೂಕ್ತ ನೆರವು ಸಿಕ್ಕಿಲ್ಲ ಎಂದೂ ಹೇಳಿದರು.

ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ಕಾಂಗ್ರೆಸ್ ಯಾವ ರೀತಿ ಕಾರ್ಯಕ್ರಮ ವಿಸ್ತರಿಸಬಹುದು ಎಂಬ ವಿಚಾರವಾಗಿಯೂ ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com