ಹಾಸನ: ಮಹತ್ತರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಎ .ಮಂಜು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ವೇದಿಕೆ ಸಿದ್ದವಾಗಿದೆ.
ಮೂರು ವರ್ಷಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ 2019 ರಲ್ಲಿ ಎ. ಮಂಜು ಬಿಜೆಪಿ ಸೇರಿದ್ದರು. ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಸ್ಪರ್ಧಿಸಿದ್ದ ಮಂಜು, ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದರು.
ಎ. ಮಂಜು ಜೊತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ, ಮಾಜಿ ಸಚಿವ ಮಂಜು ಪುತ್ರ ಮಂಥರ್ ಗೌಡ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿರುವುದರಿಂದ ಬಿಜೆಪಿಯಲ್ಲಿನ ಹೈಕಮಾಂಡ್ ತೀರ್ಮಾನದಂತೆ ಕೆಲ ನಿರ್ಬಂಧಗಳನ್ನು ಮೀರಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಎ. ಮಂಜು ಡಿಕೆಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಹಾಸನ ಡಿಸಿಸಿ ಅಧ್ಯಕ್ಷ ಜಾವಗಲ್ ಮಂಜುನಾಥ್ ಮತ್ತು ಮಾಜಿ ಕಾಂಗ್ರೆಸ್ ಎಂಎಲ್ಸಿ ಎಂಎ ಗೋಪಾಲಸ್ವಾಮಿ ಜೊತೆಗಿದ್ದರು.
ಮಂಜು ಅವರು ಕಾಂಗ್ರೆಸ್ಗೆ ಮರಳುವುದನ್ನು ವಿರೋಧಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಇತರ ಹಿರಿಯ ಕಾಂಗ್ರೆಸ್ ನಾಯಕರು ಬಹಿರಂಗಪಡಿಸಿದ್ದಾರೆ.
ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ. ಗೌಡ ಅವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ ಮಂಜು, ಹಾಸನದಿಂದ ತಮ್ಮ ಪುತ್ರ ಮಂಥರ್ ಗೌಡರಿಗೆ ಟಿಕೆಟ್ ನೀಡಲು ಪ್ರೀತಂ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಂತರ್ ಗೌಡ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
Advertisement