'ಅಧಿಕಾರವಿಲ್ಲದೆ ಬದುಕು ಅಸಹನೀಯವಾಗಿರಬೇಕು: ನಕಲಿ ಗಾಂಧಿ ಕುಟುಂಬದ ಸೇವೆ, ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ'

ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಚಿನಿಂದ ಸೋತೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಚಿನಿಂದ ಸೋತೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,  ಮಾನ್ಯ ಖರ್ಗೆಯವರೇ, ನಿಮ್ಮ ಜಿಲ್ಲೆಯ ಗ್ರಾಮಗಳಿಗೆ ನೀರು, ರಸ್ತೆ ಸಂಪರ್ಕ ಕಲ್ಪಿಸುವುದಕ್ಕೆ ನಿಮಗಿನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗ ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುತ್ತೀರಿ. ಬಹುಶಃ ಈ ಭ್ರಮೆಯೂ ನಿದ್ರಾಹೀನತೆಯ ಸಮಸ್ಯೆ ಇರಬೇಕು. ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಖರ್ಗೆಯವರೇ ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಿಮ್ಮ ಬಗ್ಗೆ ಒಂದು ಮಾತಿದೆ. ನಿಮಗೂ ಗೊತ್ತಿರಬಹುದು. ಖರ್ಗೆಯವರು ರಾಜಕೀಯಕ್ಕೆ ಬಂದಾಗಿನಿಂದ ಸರ್ಕಾರಿ ವೆಚ್ಚದಲ್ಲೇ‌ ಬದುಕಿದ್ದು ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತದೆ. ಅಧಿಕಾರವಿಲ್ಲದೆ ಬದುಕು ಅಸಹನೀಯ ಅನ್ನಿಸುತ್ತಿರಬೇಕು, ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದು ಅದಕ್ಕಾಗಿಯಲ್ಲವೇ? ಖರ್ಗೆಯವರೇ, ನಿಮ್ಮ ಸೋಲಿಗೆ ನೀವು ಕೊಡುತ್ತಿರುವ ಕಾರಣ "ಪಿಳ್ಳೆ ನೆವ" ಎಂಬಂತಿದೆ ಎಂದು ಲೇವಡಿ ಮಾಡಿದೆ.

ನಿಮ್ಮ ದುರಾಡಳಿತ, ಕುಟುಂಬ ರಾಜಕಾರಣ, ಪುತ್ರ ವ್ಯಾಮೋಹ, ಭ್ರಷ್ಟಾಚಾರದಿಂದ ರೋಸಿ ಹೋದ ಜನರು ನಿಮ್ಮನ್ನು ಸೋಲಿಸಿದ್ದರು. ಆ ಸೋಲಿಗೆ ನೀವು ಅನ್ಯರನ್ನು ಹೊಣೆಯಾಗಿಸಬೇಡಿ. ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಹಾಕುವುದೇ ಪ್ರತಿಸ್ಪರ್ಧಿಯನ್ನು ಸೋಲಿಸುವುದಕ್ಕೆ. ನೀವು ಈಗ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ. ನಾಳೆ ಆ ಅಭ್ಯರ್ಥಿ ಸೋತರೆ, ನಾನು‌ ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ, ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ ಎಂದು ವ್ಯಂಗ್ಯವಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com