ಬೆಂಗಳೂರು: ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ 'ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಮುಖಂಡ ಎಚ್ ಡಿ ಕುಮರಾಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ, ಅಯ್ಯೋ, ಎಂಥಾ ದುರ್ವಿಧಿ ಎಂದು ವ್ಯಂಗ್ಯವಾಡಿದ್ದಾರೆ.ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ 'ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು 'ಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ ಎಂದು ವ್ಯಂಗ್ಯವಾಡಿದ್ದಾರೆ.
ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು. ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಟೀಕಿಸಿದ್ದಾರೆ.
ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಲೇವಡಿ ಮಾಡಿದ್ದಾರೆ.
Advertisement