ಬೆಳಗಾವಿ: ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ, ಮತಾಂತರ ನಿಷೇದ ಕರಡು ಕಾಯ್ದೆ ಚರ್ಚೆ ಸಾಧ್ಯತೆ
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.
ಇಂದು ಮಧ್ಯಾಹ್ನ 1.30ಕ್ಕೆ ಸುವರ್ಣ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದೆ. ಸರ್ಕಾರ ಮತಾಂತರ ನಿಷೇಧ ಕರಡು ಕಾಯ್ದೆಯನ್ನು ನಾಡಿದ್ದು 22 ಅಥವಾ 23ರಂದು ಮಂಡಿಸುವ ಸಾಧ್ಯತೆಯಿದೆ.
ಮತಾಂತರ ನಿಷೇಧ ಕರಡು ಕಾಯ್ದೆಗೆ ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿಯಲ್ಲಿ ಕೂಡ ಈ ಬಗ್ಗೆ ಒಮ್ಮತವಿಲ್ಲ ಎಂಬುದು ತಿಳಿದುಬಂದಿದೆ. ಕೆಲ ಶಾಸಕರು ಈಗ ತರಾತುರಿಯಲ್ಲಿ ತರುವುದು ಬೇಡ, ಸಾರ್ವಜನಿಕವಾಗಿ ಹೆಚ್ಚು ಚರ್ಚೆಯಾಗಬೇಕು ಎಂದು ಹೇಳುತ್ತಿದ್ದಾರೆ.
ಈ ಮದ್ಯೆ, ರಾಜ್ಯ ಸರ್ಕಾರ ಎಲ್ಲ ಸಮುದಾಯದ ಭಾವನಗಳಿಗೆ ಸ್ಪಂದಿಸುತ್ತಿದೆ. ಎಲ್ಲರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಹೇಳಿದರು.
ಇನ್ನೊಂದೆಡೆ ಬೆಳಗಾವಿಯಲ್ಲಿ ಅಹಿತಕರ ಘಟನೆ ತಡೆಯಲು ಬೆಳಗಾವಿ ತಾಲೂಕಿನಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಬೆಳಗಾವಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಯಾವುದೇ ಪ್ರತಿಭಟನೆ, ಹೋರಾಟ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ