ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜ.9ರಿಂದ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೊಂದು ಪಕ್ಷಾತೀತ ಹೋರಾಟವಾಗಿದೆ. ಜನರು ಈ ಹೋರಾಟದಲ್ಲಿ ಕೈಜೋಡಿಸಿ ಸರ್ಕಾರ ಮೇಲುಗೈ ಸಾಧಿಸುವಂತೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಶಿವಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪ್ರಜಾಪ್ರಭುತ್ವಕ್ಕೆ ಹೊಡೆತ ಬಿದ್ದಿದೆ. ನ್ಯಾಯಾಧೀಶಕರಿಗೆ ಇಲ್ಲಿ ಸುರಕ್ಷತೆ ಇಲ್ಲದಂತಾಗಿದೆ, ಬಿಜೆಪಿಗೆ ನ್ಯಾಯಾಂಗ, ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಗೌರವವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ನಾವು ಕೈಕಟ್ಟಿ ಸುಮ್ಮನೆ ಕುಳಿತಿರಲಿಲ್ಲ. ಜನರ ಸಹಾಯಕ್ಕೆ ಧಾವಿಸಿದ್ದೆವು. ಇದೀಗ ಮೇಕೆದಾಟು ಯೋಜನೆ ಜಾರಿಗೆ ಹೋರಾಟಕ್ಕೆ ಮುಂದಾಗಿದ್ದು, ಜನರು ಕೂಡ ಹೋರಾಟದೊಂದಿಗೆ ಕೈಜೋಡಿಸಬೇಕು. ಯೋಜನೆ ಜಾರಿಗೊಳಿಸುವಲ್ಲಿ ಸರ್ಕಾರ ಮೇಲುಗೈ ಸಾಧಿಸುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಯೋಜನೆ ಜಾರಿಗೆ ಕಾಂಗ್ರೆಸ್ ಡಿಪಿಆರ್ ಸಿದ್ಧಪಡಿಸಿತ್ತು. ಕೇಂದ್ರದ ಅನುಮತಿಯನ್ನೂ ಕೇಳಿತ್ತು. ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಇದೊಂದು ಐತಿಹಾಸಿಕ ಹೋರಾಟವಾಗಲಿದೆ ಎಂದಿದ್ದಾರೆ.
Advertisement