ರಾಜ್ಯ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ: ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಮಧ್ಯಾಹ್ನ 3.50ರ ಶುಭ ಮುಹೂರ್ತದಲ್ಲಿ 7-8 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.
Published: 13th January 2021 08:12 AM | Last Updated: 13th January 2021 12:48 PM | A+A A-

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಮಧ್ಯಾಹ್ನ 3.50ರ ಶುಭ ಮುಹೂರ್ತದಲ್ಲಿ 7-8 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 7-8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಗಳಿದ್ದು, ಅಂತಿಮವಾಗಿ ಯಾರು ಸಂಪುಟ ಸೇರ್ಪಡೆಯಾಗಲಿದ್ದಾರೆಂಬುದರ ಸ್ಪಷ್ಟ ಮಾಹಿದಿ ಇಂದು ಬೆಳಿಗ್ಗೆ ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ 7 ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಹೆಚ್.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವ ಪ್ರಯತ್ನಗಳು ನಡೆದಿದೆ ಎನ್ನಲಾಗಿದೆ.
ಒಬ್ಬರನ್ನು ಕೈಬಿಡಬೇಕಾಗಿ ಬರಬಹುದು ಎಂಬ ಮಾತನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಆದರೆ, ಇದಕ್ಕೆ ನಾಗೇಶ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸ್ವತಃ ನಾಗೇಶ್ ಅವರೂ ಕೂಡ ತಮ್ಮನ್ನು ಸಂಪುಟದಿಂದ ಕೈಬಿಡದಂತೆ ಮುಖ್ಯಮಂತ್ರಿಗಳ ಬಳಿ ಪರಿ ಪರಿಯಾಗಿ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ನಾಗೇಶ್ ಅವರ ಮನವಿಗೆ ಮಣಿದು ಅವರನ್ನು ಸಂಪುಟದಲ್ಲಿ ಮುಂದುವರೆಸುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಈ ನಡುವೆ ಇಂದು ಬೆಳಿಗ್ಗೆ 11.30ಕ್ಕೆ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ಕರೆದಿದ್ದು, ಬಳಿಕ ನಾಗೇಶ್ ಅಥವಾ ಬೇರೆ ಯಾವುದಾದರೂ ಸಚಿವರ ರಾಜೀನಾಮೆ ಪಡೆಯುವ ನಿರ್ಧಾರ ಹೊರ ಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಅನ್ಯ ಪಕ್ಷಗಳಿಂದ ವಲಸೆ ಬಂದು ಸರ್ಕಾರ ರಚಿಸಲು ನೆರವಾಗಿರುವ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನಿಶ್ಚಿತವೆಂದೇ ಹೇಳಲಾಗುತ್ತಿದೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಮಾತನಾಡಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿಪಿ ಯೋಗೇಶ್ವರ್, ಆರ್.ಶಂಕರ್, ಎನ್.ಮುನಿರತ್ನ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂದು ಹೇಳಿದ್ದಾರೆ.
ಈ ನಡುವೆ ಶಾಸಕ. ಎಸ್.ಅಂಗಾರ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಹಾಲಪ್ಪ ಆಚಾರ್ ಅವರ ಹೆಸರುಗಳೂ ಕೂಡ ಕೇಳಿ ಬರುತ್ತಿದೆ.
ಮೂಲಗಳ ಪ್ರಕಾರ ಮುನಿರತ್ನ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಇನ್ನೂ ಸ್ಪಷ್ಟ ಮಾಹಿತಿಗಳು ಲ್ಯವಾಗಿಲ್ಲ. ಆದರೆ, ನಿನ್ನೆ ಮಧ್ಯಾಹ್ನದಿಂದ ರಾತ್ರಿಯವರೆಗೂ ಮುಖ್ಯಮಂತ್ರಿಗಳ ಕಚೇರಿ ಬಳಿ ಮುನಿರತ್ನ ಅವರು ಇರುವುದು ಕಂಡು ಬಂದಿದೆ.
ಉಮೇಶ್ ಕತ್ತಿ ಹಾಗೂ ನಿರಾಣಿಯವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಪಕ್ಷದ ಸಹಮತವಿಲ್ಲದೇ ಇದ್ದರೂ ಯಡಿಯೂರಪ್ಪ ಅವರು ಹೈಕಮಾಂಡ್ ಜೊತೆಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಸಂಪುಟ ವಿಸ್ತರಣೆ ಕುರಿತಂತೆ ಹೇಳಿಕೆ ನೀಡಿರುವ ಶಾಸಕ ಉಮೇಶ್ ಕತ್ತಿಯವರು, ಸಚಿವನಾಗಿ ಕಾರ್ಯನಿರ್ವಹಿಸಿ 13 ವರ್ಷಗಳ ಅನುಭವ ನನಗಿದೆ. ನನ್ನನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದ್ದೇ ಆದರೆ, ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದು ಹೇಳಿದ್ದಾರೆ.