ಬೆಂಗಳೂರು: ನಿಜವಾದ ಕಾಂಗ್ರೆಸ್ಸಿಗರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಗೊಂದಲ ಸೃಷ್ಟಿಸುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದರು.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟದ್ದು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ. ಪಕ್ಷ ಶಿಸ್ತಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು ಬೇಜವಾಬ್ದಾರಿಯುತ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಮುಖ್ಯಮಂತ್ರಿ ಸ್ಥಾನ ಖಾಲಿಯೂ ಇಲ್ಲ. ಕಾಂಗ್ರೆಸ್ನ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023ರ ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು ತಿಳಿಸಿದ್ದಾರೆ.
Advertisement