ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ವಿವಾದ ತಾರಕಕ್ಕೇರಿದೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರು ಈ ವಿಚಾರದಲ್ಲಿ ತಮ್ಮ ಪ್ರತಿಷ್ಠೆಯನ್ನು ನೋಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ನಿನ್ನೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿತ್ತು.
ನಂತರ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ಮಧ್ಯೆ ಹಲವು ಬೆಳವಣಿಗೆಗಳು ಏರ್ಪಟ್ಟಿವೆ. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಉತ್ತರಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ನಾಯಕರಿಗೆ ನಾನು ನನ್ನದೇ ಸಲಹೆ ಕೊಟ್ಟಿದ್ದೇನೆ. ನಾನು ಕೊಟ್ಟಿರೋ ಸಲಹೆಯನ್ನು ಎಲ್ಲರಿಗೂ ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.
ಯುವ ನಾಯಕತ್ವ ವಿಚಾರದಲ್ಲಿ ಚುನಾವಣಾ ಅಧಿಕಾರಿಗಳು ಸಂಧಾನ ಮಾಡುತ್ತೇನೆ ಎಂದರು, ಇಬ್ಬರನ್ನೂ ಕರೆದು ಕೂರಿಸಿ ಸಂಧಾನ ಮಾಡಿಸಿ ಎಂದು ಹೇಳಿದ್ದೇನೆ. ಏನು ಒಪ್ಪಂದ ಆಗಿದೆ ಎಂದು ನನಗೆ ಗೊತ್ತಾಗಿಲ್ಲ ಎಂದರು.
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಲ್ಲಿ ಪ್ರತಿಕ್ರಿಯೆ ಕೇಳಿದಾಗ ಯಾವುದೇ ಉತ್ತರ ನೀಡದೆ ತೆರಳಿದರು.
Advertisement