ಮಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸಲು ಪರ್ಯಾಯ ನಾಯಕರಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆಡಳಿತಾರೂಢ ಬಿಜೆಪಿಯಲ್ಲಿ ನಾಯಕರಿಗೆ ಕೊರತೆ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಏಳು ವರ್ಷ ಪೂರೈಸುತ್ತಿರು ಸಂದರ್ಭದಲ್ಲಿ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅನುಭವ ಪರಿಗಣಿಸಿ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲು ಎಲ್ಲರೂ ನಿರ್ಧರಿಸಿದ್ದೇವೆ. ಆದರೆ, ಕಾಂಗ್ರೆಸ್ ನಲ್ಲಿ ನಿಜವಾಗಿಯೂ ನಾಯಕರ ಕೊರತೆ ಇದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಟೀಲ್, ತಮ್ಮ ಹಿನ್ನೆಲೆ ಏನೆಂಬುದನ್ನು ಮೊದಲು ಸಿದ್ದರಾಮಯ್ಯ ನೋಡಬೇಕು. ಪಕ್ಷದಿಂದ ಪಕ್ಷಕ್ಕೆ ಜಿಗಿದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿಲ್ಲ. ಜನರ ಒಳತಿಗಾಗಿ 45 ವರ್ಷಗಳಿಂದಲೂ ಯಡಿಯೂರಪ್ಪ ಹೋರಾಡಿದ್ದಾರೆ. ನಾಯಕತ್ವ ಗುಣಗಳಿಂದ ಅವರು ಖ್ಯಾತಿಯಾಗಿದ್ದಾರೆ ಎಂದು ಹೇಳಿದ್ದಾರೆ.
Advertisement