ಬಿಟ್ ಕಾಯಿನ್ ಬಡಿದಾಟ: ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ; ಗೃಹಸಚಿವರಿಗೆ ದೂರು?
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಹ್ಯಾಕರ್ ಶ್ರೀಕೃಷ್ಣನ ಸುತ್ತ ಸುತ್ತಿಕೊಂಡಿರುವ ಈ ಪ್ರಕರಣದಲ್ಲಿ ರಾಜಕೀಯ ನಾಯಕರು, ಅಧಿಕಾರಿಗಳು, ರಾಜಕೀಯ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂಬುದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಆರೋಪ.
ಬಿಟ್ ಕಾಯಿನ್ ಪ್ರಕರಣವನ್ನು ಬಿಜೆಪಿ ಸರ್ಕಾರ ಮುಚ್ಚಿಹಾಕಲು ನೋಡುತ್ತಿದೆ. ಪ್ರಧಾನಿಯವರೇ ರಾಜ್ಯ ಬಿಜೆಪಿ ನಾಯಕರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ರಾಷ್ಟ್ರಮಟ್ಟದಲ್ಲಿ ಆರೋಪ ಮಾಡುತ್ತಿದ್ದರೆ ಇದಕ್ಕೆ ಟಕ್ಕರ್ ನೀಡಲು ಬಿಜೆಪಿ ನಾಯಕರು ಪ್ರತಿತಂತ್ರ ರೂಪಿಸುತ್ತಿದ್ದಾರೆ.
ಬಿಟ್ ಕಾಯಿನ್ ಅಕೌಂಟ್ ಹ್ಯಾಕರ್ ಶ್ರೀಕಿ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಮತ್ತು ಬಿಟ್ ಕಾಯಿನ್ ಹಾಗೂ ಡ್ರಗ್ ಕೇಸಿನಲ್ಲಿ ಥಳಕು ಹಾಕಿಕೊಂಡಿರುವ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯ ಹೆಸರುಗಳನ್ನು ಪ್ರಮುಖ ಅಸ್ತ್ರವಾಗಿ ತೆಗೆದುಕೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಇಬ್ಬರು ಕಾಂಗ್ರೆಸ್ ನಾಯಕರ ಹೆಸರುಗಳು ಕೇಳಿಬರುತ್ತಿದ್ದು, ಇವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.