ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ: ಎಂಎಲ್'ಸಿ ಚುನಾವಣೆಗೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಕೆ

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಮಾಜಿ ಪ್ರಧಾನಿ ಮೊಮ್ಮಗ ಡಾ.ಸೂರಜ್ ರೇವಣ್ಣ ಅವರು ಹಾಸನ ಸ್ಥಳೀಯ ಸಂಸ್ಥೆಗಳ ಎಂಎಲ್‌ಸಿ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುತ್ತಿರುವ ಸೂರಜ್ ರೇವಣ್ಣ
ನಾಮಪತ್ರ ಸಲ್ಲಿಸುತ್ತಿರುವ ಸೂರಜ್ ರೇವಣ್ಣ

ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಮಾಜಿ ಪ್ರಧಾನಿ ಮೊಮ್ಮಗ ಡಾ.ಸೂರಜ್ ರೇವಣ್ಣ ಅವರು ಹಾಸನ ಸ್ಥಳೀಯ ಸಂಸ್ಥೆಗಳ ಎಂಎಲ್‌ಸಿ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಾಜಿ ಸಚಿವ ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿಗಳೂ ಆದ ಹಾಸನ ಜಿಲ್ಲಾಧಿಕಾರಿಗೆ ಸೂರಜ್ ನಾಮಪತ್ರ ಸಲ್ಲಿಸಿದರು. ತಂದೆ ಜೊತೆಗೆ ಒಂದು, ತಾಯಿ ಜೊತೆಗೆ ಇನ್ನೊಂದು ಒಟ್ಟು ಎರಡು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು.

ಸೂರಜ್ ರೇವಣ್ಣ ನಾಮಪತ್ರಕ್ಕೆ ಸೂಚಕರಾಗಿ ಶಾಸಕ ಶಿವಲಿಂಗೇಗೌಡ, ಬಾಲಕೃಷ್ಣ, ಲಿಂಗೇಶ್, ಎ. ಟಿ. ರಾಮಸ್ವಾಮಿ, ಎಚ್. ಡಿ. ರೇವಣ್ಣ ಸಹಿ ಹಾಕಿದರು. ನಾಮಪತ್ರ ಸ್ವೀಕರಿಸಿದ ಚುನಾವಣಾ ಅಧಿಕಾರಿ ಆರ್. ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಇದೇ ಮೊದಲ ಬಾರಿಗೆ ಸೂರಜ್ ರೇವಣ್ಣ ಚುನಾವಣಾ ಕಣಕ್ಕಿಳಿದಿದ್ದಾರೆ. ಈ ಮೊದಲು ವಿಧಾನ ಪರಿಷತ್ ಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಭವಾನಿ ಬದಲು ಅವರ ಮಗ ಸೂರಜ್ ರೇವಣ್ಣಗೆ ಟಿಕೆಟ್ ನೀಡಲಾಗಿದೆ.

ತಂದೆ ಹೆಚ್.ಡಿ.ರೇವಣ್ಣ ಅವರ ಸೂಚನೆಯಂತೆಯೇ ಸೂರತ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಬಲಗಾಲಿಟ್ಟು ಪ್ರವೇಶ ಮಾಡಿದ ಸೂರಸ್ ಅವರು, ಮಧ್ಯಾಹ್ನ 12.11 ರಿಂದ 12.15 ಅವಧಿಯಲ್ಲಿಯೇ ನಾಮಪತ್ರ ಸಲ್ಲಿಕೆ ಮಾಡಿದರು. ಜೊತಗೆ ರೂ.500 ಹೊಸ ನೋಟುಗಳಿದ್ದ ರೂ.10,000 ಗಳನ್ನು ಠೇವಣಿ ಇರಿಸಿದರು. ಇದಕ್ಕೂ ಮುನ್ನ ಗುರುವಾರ ನಾಮಪತ್ರ ಹಾಗೂ ಹಣವನ್ನು ಹಲವು ದೇವಾಲಗಳಲ್ಲಿ ದೇವರ ಮುಂದೆ ಇರಿಸು ಪೂಜೆಯನ್ನು ಸಲ್ಲಿಸಲಾಗಿತ್ತು.

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೂರಜ್ ಅವರು, ಪಕ್ಷವು ನನ್ನನ್ನು ಎಂಎಲ್'ಸಿ ಅಭ್ಯರ್ಥಿಯಾಗಿ ಆಯ್ಕೆ ಮಾಡುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ತಾತ ಹೆಚ್.ಡಿ.ದೇವೇಗೌಡ ಅವರ ನಿರ್ದೇಶನದಂತೆ ನಡೆಯುತ್ತೇನೆಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಎಚ್. ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಯ ಮಗ. 2020ರಲ್ಲಿ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ, ಇದುವರೆಗೂ ವಿಧಾನಸಭೆ, ವಿಧಾನ ಪರಿಷತ್, ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದ ಸೂರಜ್ ರೇವಣ್ಣ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ಸೂರತ್  ಅವರು, ಹೊಳೆನರಸೀಪುರ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ತಮ್ಮ ತಂದೆಯೊಂದಿಗೆ ಪ್ರವಾಸ ಮಾಡಿ ರಾಜಕೀಯ ಅನುಭವ ಪಡೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com