ಲಖಿಂಪುರ್ ಖೇರಿ ಹಿಂಸಾಚಾರ: ನೈತಿಕ ಹೊಣೆ ಹೊತ್ತು ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಲಿ- ಡಿ.ಕೆ. ಶಿವಕುಮಾರ್

ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. 
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. 

ಉತ್ತರಪ್ರದೇಶದ ರೈತರ ಹತ್ಯೆ, ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿನ್ನೆ ಕೆಪಿಸಿಸಿ ಕಚೇರಿಯಿಂದ ರಾಜಭವನವರೆಗೆ ಪಂಜಿನ ಮೆರವಣಿಗೆ ನಡೆಸಿದರು. 

ಈ ವೇಳೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಇಡೀ ದೇಶದಲ್ಲಿ ರೈತ ಸಿಡಿದೆದ್ದಿದ್ದಾನೆ. ಇಂಥ ರೈತರ ಸಾವಾದಾಗ ಅಲ್ಲಿಗೆ ಹೋಗಲು ಮುಂದಾದ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಎಳೆದಾಡಿದ್ದಾರೆ. ಇಡೀ ದೇಶ ಪ್ರಿಯಾಂಕಾ ಗಾಂಧಿ ಅವರ ಬೆನ್ನ ಹಿಂದಿದೆ. ಸತ್ತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಮುಂದಾಗಿದ್ದರು. ಸಾಂತ್ವನ ಹೇಳುವುದು ನಮ್ಮ ಸಂಸ್ಕೃತಿ. ಎಳೆದಾಡಿ ತಡೆಯುವುದು ಬಿಜೆಪಿ ಸಂಸ್ಕೃತಿ. ಸರ್ವಾಧಿಕಾರಿ ಆಡಳಿತ ದೇಶದಲ್ಲಿ ನಡೆಯುತ್ತಿದೆ. ಹಿಟ್ಲರ್ ಮಾದರಿಯ ಆಡಳಿತ ನಡೆಯುತ್ತಿದೆ. ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ದೇಶದ ಅನ್ನದಾತನ ಶಾಂತಿಯುತ ಪ್ರತಿಭಟನೆ ಸಹಿಸಲಿಲ್ಲ. ಅನ್ನದಾತರನ್ನು ಒಬ್ಬ ಕೇಂದ್ರ ಸಚಿವನೂ ಭೇಟಿ ಮಾಡಲಿಲ್ಲ. ಬಿಜೆಪಿ ಸರ್ಕಾರ ರೈತರ ಮಾತುಕತೆಗೂ ಕರೆಯದೇ ಇಂಥ ಕೃತ್ಯ ನಡೆಸಿರುವುದು ಖಂಡನೀಯ. ಆಡಳಿತದಲ್ಲಿ ಬಿಜೆಪಿಯವರು ಬ್ರಿಟಿಷರಿಗಿಂತ ಮೇಲು. ಬ್ರಿಟಿಷರಾದರೂ ಕಡೆಗೆ ತಲೆಬಾಗಿ ಓಡಿ ಹೋದರು. ಆದರೆ, ಈ ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ. ಪ್ರಿಯಾಂಕಾ ಗಾಂಧಿಯವರೇ ಇಡೀ ದೇಶದ ಜನ ನಿಮ್ಮ ಹಿಂದೆ ಇದ್ದಾರೆ. ನೀವು ಮುನ್ನುಗ್ಗಿ, ನಿಮ್ಮ ಬೆನ್ನ ಹಿಂದೆ ನಾವು ಇದ್ದೇವೆ. ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ’ ಎಂದರು.

ಎಸ್‌ಯುಸಿಐ (ಸಿ) ರಾಜ್ಯ ಕಾರ್ಯದರ್ಶಿ ಕೆ ಉಮಾ ಅವರು ಮಾತನಾಡಿ, ತಪ್ಪಿತಸ್ಥರಿಗೆ ಶಿಕ್ಷೆ ಹಾಗೂ ಮೃತ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. 

"ಜನರು ಮುಂದೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿ ಈ ಕುರಿತು ಧ್ವನಿ ಎತ್ತಬೇಕು ಮತ್ತು ದೇಶದಾದ್ಯಂತ ಅಕ್ಟೋಬರ್ 5 ರಂದು ಪ್ರತಿಭಟನಾ ದಿನವನ್ನು ಆಚರಿಸಬೇಕು ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com