ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ: ಡಿಕೆ ಶಿವಕುಮಾರ್

ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಡಿಕೆ ಶಿವಕುಮಾರ್
Updated on

ಸಿಂದಗಿ: ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 'ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ. ಮನಗೂಳಿ ಅವರು ಕೊನೆಯುಸಿರು ಎಳೆಯುವುದಕ್ಕೂ 15 ದಿನಗಳ ಮುನ್ನ ನನ್ನನ್ನು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನನ್ನ ಮಗನನ್ನು ನಿಮ್ಮ ಕೈಲಿಡುತ್ತಿದ್ದೇನೆ ಎಂದಿದ್ದರು. ಅವರು ನನಗೆ ಆತ್ಮೀಯರಾಗಿದ್ದರು. ಅವರು ಗೌರವಯುತ ಹಾಗೂ ಸಜ್ಜನಿಕೆಯಿಂದ ನಡೆದುಕೊಳ್ಳುತ್ತಿದ್ದರು. ನಾವೆಲ್ಲ ಸೇರಿ ಅವರಿಗೆ ಕೊಟ್ಟ ಮಾತಿನಂತೆ ಒಮ್ಮತದಿಂದ ಅಶೋಕ್ ಮನಗೂಳಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಇಂದು ಸಿಂದಗಿಯಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ನಿನ್ನೆ ಹಾನಗಲ್ ನಲ್ಲಿ ನಾಮಪತ್ರ ಸಲ್ಲಿಸಿದ್ದೆವು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಇಲ್ಲಿ ಸೇರಿದ ಜನಸಾಗರಕ್ಕೆ ನಿಮ್ಮ ಕಣ್ಣು, ಕ್ಯಾಮೆರಾಗಳೇ ಸಾಕ್ಷಿ. ಆ ಬಗ್ಗೆ ನಾವು ಹೇಳುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲ ವರ್ಗದ ಜನ, ಯುವಕರು ಸ್ವಯಂಪ್ರೇರಿತವಾಗಿ ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಈ ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ, ಕೋವಿಡ್ ಸಮಯದಲ್ಲಿ ಬಿಜೆಪಿ ಆಡಳಿತದಿಂದ ಜನರು ಅನುಭವಿಸುತ್ತಿರುವ ನೋವನ್ನು ಹೇಳಿಕೊಳ್ಳಲು ಒಂದು ಅವಕಾಶವಾಗಿದೆ. ಸರ್ಕಾರ ಯಾವ ವರ್ಗಕ್ಕೂ ಅನುಕೂಲ ಮಾಡಿಕೊಟ್ಟಿಲ್ಲ. ಇದನ್ನು ಜನರು ಗಮನದಲ್ಲಿಟ್ಟುಕೊಂಡು ಅವರಿಗೆ ಉತ್ತರ ನೀಡಲು ಸಜ್ಜಾಗಿದ್ದಾರೆ. ನಾವೆಲ್ಲಾ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದ ಜನರ ಮೇಲೆ ವಿಶ್ವಾಸ ಇಟ್ಟಿದ್ದು, ಅವರ ಭಾವನೆ, ನೋವು, ಅವರಿಗಾದ ಅನ್ಯಾಯ, ಆಕ್ರೋಶ ವ್ಯಕ್ತಪಡಿಸಲು ಇದೊಂದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು.

ನಮ್ಮ ಅಭ್ಯರ್ಥಿಗಳನ್ನು ಸಮಾಜದ ಎಲ್ಲ ವರ್ಗದ ಜನರು ಒಪ್ಪಿಕೊಂಡಿದ್ದಾರೆ. ಇಲ್ಲಿ ಪಕ್ಷಭೇದ ಮರೆತು ನಮ್ಮ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಎರಡು ಕ್ಷೇತ್ರಗಳಲ್ಲೂ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ನಾವು ಗೆಲುವು ದಾಖಲಿಸಲಿದ್ದೇವೆ ಎಂಬ ವಿಶ್ವಾಸವಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com