ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ ವಿಚಾರ ಹಿಡಿದು ಸದನದಲ್ಲಿ ಬಿಜೆಪಿ ಹಣಿಯಲು ಕಾಂಗ್ರೆಸ್ ತಂತ್ರ!

ಜನರನ್ನು ತತ್ತರಿಗೊಳಿಸಿರುವ ಬೆಲೆ ಏರಿಕೆ, ಕುಸಿದಿರುವ ಕಾನೂನು ಸುವ್ಯವಸ್ಥೆ ಹಾಗೂ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಅಸ್ತ್ರವಾಗಿಟ್ಟುಕೊಂಡು ಸೆ.13ರಿಂದ ಆರಂಭವಾಗುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಹೋರಾಟ ನಡೆಸಲು ಪ್ರತಿಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಜನರನ್ನು ತತ್ತರಿಗೊಳಿಸಿರುವ ಬೆಲೆ ಏರಿಕೆ, ಕುಸಿದಿರುವ ಕಾನೂನು ಸುವ್ಯವಸ್ಥೆ ಹಾಗೂ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಅಸ್ತ್ರವಾಗಿಟ್ಟುಕೊಂಡು ಸೆ.13ರಿಂದ ಆರಂಭವಾಗುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಹೋರಾಟ ನಡೆಸಲು ಪ್ರತಿಪಕ್ಷ ಕಾಂಗ್ರೆಸ್ ನಿರ್ಧರಿಸಿದೆ. 

ವಿಧಾನಮಂಡಲ ಅಧಿವೇಶನದಲ್ಲಿ ಯಾವ ಯಾವ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು, ತರಾಟೆಗೆ ತೆಗೆದುಕೊಳ್ಳಬೇಕೆಂಬ ಬಗ್ಗೆ ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಸಲಾಯಿತು. 

ಸಭೆಯನ್ನು ಪ್ರಮುಖವಾಗಿ ಈ ಬಾರಿಯ ಅಧಿವೇಶನದಲ್ಲಿ ಜಾರಿ ಜನಗಣತಿ ವರದಿಯನ್ನು ಅನುಮೋದಿಸಿ ಜಾರಿಗೊಳಿಸಲು ಸರ್ಕಾರದ ಮೇಲೆ ತೀವ್ರ ಒತ್ತಡ ತರಲು ತೀರ್ಮಾನಿಸಲಾಗಿದೆ. ಸ್ವಾತಂತ್ರ್ಯ ಪೂರ್ವದ ಜಾತಿ ಜನಗಣತಿ ಆಧಾರದ ಮೇಲೆ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇದರಿಂದ ಎಲ್ಲಾ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳು ತಲುಪುತ್ತಿಲ್ಲ. ಹಾಗಾಗಿ ಜಾತಿ ಗಣತಿ ವರದಿ ಆಗ್ರಹಿಸಿ ಹೋರಾಟ ನಡೆಸಲು ಪಕ್ಷ ತೀರ್ಮಾನಿಸಿದೆ. 

ಅದೇ ರೀತಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಹಾಗಾಗಿ ತಮಿಳುನಾಡು ಮಾದರಿಯಲ್ಲಿ ತೈಲೋತ್ಪನ್ನಗಳ ಮೇಲಿನ ಜಿಎಸ್'ಟಿ ದರ ಕಡಿಮೆ ಮಾಡಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಜೊತೆಗೆ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯ, ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ ನಿರ್ಲಕ್ಷ್ಯದ ಹೇಳಿಕೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದೆದುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. 

ಸಭೆಯಲ್ಲಿ ಮಾತನಾಡಿಸುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದಕ್ಕೆ ಮೈಸೂರು ಘಟನೆಯೇ ಸಾಕ್ಷಿ. ಸರ್ಕಾರದಲ್ಲಿ ಭ್ರಷ್ಟಾಚಾರವೂ ಮಿತಿ ಮೀರಿದ್ದು, ಈ ಸರ್ಕಾರ 20 ಪರ್ಸೆಂಟ್ ಸರ್ಕಾರ ಎಂಬುದು ಈಗಲೇ ಜಗಜ್ಜಾಹೀರಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಗೆ ಇಳಿದಿದೆ. 

ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ. ಸಂಸತ್ ನಲ್ಲಾಗಲಿ, ರಾಜ್ಯ ವಿಧಾನಮಂಡಲದಲ್ಲಾಗಲಿ ಚರ್ಚಿಸದೆ ಅನೇಕ ಲೋಪಗಳಿರುವ ರಾಷಅಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಏಕ ಚಕ್ರಾಧಿಪತ್ಯ ನಡೆಸಲಾಗುತ್ತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಬಡ ಜನರಿಗೆ ಜಾರಿಗೊಳಿಸಿದ್ದ ಅನೇಕ ಕಾರ್ಯಕ್ರಮಗಳಲ್ಲಿ ಫಲಾನುಭವಿಗಳಿಗೆ ಅನುದಾನ ತಲುಪುತ್ತಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ನಾವು ಜನರ ದನಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com