ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ದೆಹಲಿ ಪ್ರವಾಸ ಫಲಪ್ರದವಾಗಿದೆ. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ( ದಾಬಸ್ ಪೇಟೆಯಿಂದ- ಮೈಸೂರು ರಸ್ತೆವರೆಗೆ) ಎರಡ್ಮೂರು ವರ್ಷಗಳಿಂದ ಬಾಕಿಯಿದೆ. ಅದನ್ನು ಮುಂದುವರೆಸಲಿದ್ದು, ಐದಾರು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಹೇಳಿದರು.
ಬೆಂಗಳೂರು ಮತ್ತು ಕೋಲಾರದ ನಡುವೆ ಹಾರ್ಡ್ ವೇರ್ ಪಾರ್ಕ್ , ನಗರ ಉಪ ರೈಲ್ವೆ ಯೋಜನೆ ಸೇರಿದಂತೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ. ತುಮಕೂರು- ದಾವಣಗೆರೆ, ಹುಬ್ಬಳ್ಳಿ- ಬೆಳಗಾವಿ, ಬೀದರ್, ಕಲಬುರಗಿ ಎಲ್ಲ ಕಡೆ ಆದಷ್ಟು ಬೇಗ ರೈಲು ಯೋಜನೆಗಳನ್ನು ಆರಂಭಿಸುವ ಬಗ್ಗೆ ಮಾತುಕತೆ ನಡೆದಿದೆ ಎಂದರು.
ನಿಫಾ ವೈರಸ್ ವಿಚಾರವಾಗಿ, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕೇರಳದಿಂದ ಆಗಬಹುದಾದ ಸಮಸ್ಯೆಗಳನ್ನು ನಿಯಂತ್ರಿಸುವ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದರು.