ರಾಮನಗರ: ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್ ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ನಮ್ಮ ಶಾಸಕರ ಜೊತೆ ಎಲ್ಲ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅಶೋಕ್ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಸಮಾಲೋಚಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
Advertisement