ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗೊಂದಲ ಇನ್ನೂ ಮುಗಿದಿಲ್ಲ. ಜೆಡಿಎಸ್ ಜೊತೆ ಕೈ ಜೋಡಿಸಿ ಅಧಿಕಾರ ಹಿಡಿಯಲು ಕಾಂಗ್ರೆಸ್ ತವಕಿಸುತ್ತಿದೆ.
ಕಲಬುರಗಿ ಪಾಲಿಕೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬಹುದು ಎಂದು ಊಹಿಸಲಾಗುತ್ತಿದೆ.
ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ಪರಮೋಚ್ಛ ನಾಯಕ ಎಚ್.ಡಿ ದೇವೇಗೌಡ ಅವರ ಜೊತೆ ಮಾತುಕತೆ ನಡೆಸಿದ್ದು ಮೈತ್ರಿ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿತ್ತು. ಆದರೆ ಜೆಡಿಎಸ್ ಕಡೆಯಿಂದ ಯಾವುದೇ ರೆಸ್ಪಾನ್ಸ್ ಸಿಗುತ್ತಿಲ್ಲ.
ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ತಮ್ಮ ಜೊತೆ ಮೈತ್ರಿ ಮಾಡಿಕೊಳ್ಳಬಹುದೆಂಬ ಆಶಾವಾದದಲ್ಲಿದ್ದಾರೆ. ಮತಗಳು ನಮ್ಮ ಪರವಾಗಿರುವ ಕಾರಣ ನಮಗೆ ಅಧಿಕಾರ ಸಿಗುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಮತ್ತೊಂದು ಆಸಕ್ತಿದಾಯಕ ಅಂಶವೆಂದರೆ ಮಲ್ಲಿಕಾರ್ಜುನ ಖರ್ಗೆ ಅವರೊಬ್ಬರು ಮಾತ್ರ ಮೈತ್ರಿ ಬಗ್ಗೆ ಮಾತನಾಡಿದ್ದಾರೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೈತ್ರಿ ಸಂಬಂಧ ಯಾರ ಜೊತೆಗೂ ಮಾತನಾಡಿಲ್ಲ. ಆದರೆ ಬಿಜೆಪಿ ಮುಖಂಡರು ಜೆಡಿಎಸ್ ನಾಯಕರು ಮನವೊಲಿಸುವ ಪ್ರಯತ್ನ ಮುಂದುವರಿಸುತ್ತಲೇ ಇದ್ದಾರೆ.
ಬಿಜೆಪಿ ಮುಖಂಡ ಆರ್.ಅಶೋಕ್ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು, ಕಲಬುರಗಿ ಪಾಲಿಕೆ ಮೇಲೆ ಹಿಡಿತ ಸಾಧಿಸಲು ಬಿಜೆಪಿ ತನ್ನ ಎಲ್ಲಾ ಪ್ರಯತ್ನವನ್ನು ಮುಂದುವರಿಸುತ್ತಿದೆ.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಇತರ ನಾಯಕರು ಜೆಡಿಎಸ್ ಬೆಂಬಲ ಪಡೆಯಲು ಸಕ್ರಿಯವಾಗಿ ಎಲ್ಲಾ ಕ್ರಮಕ್ಕೆ ಮುಂದಾಗಿದ್ದಾರೆ. ಕುಮಾರಸ್ವಾಮಿ ಅವರು ಈ ನಿರ್ಧಾರವನ್ನು ಜೆಡಿಎಸ್ ಕೌನ್ಸಿಲರ್ಗಳಿಗೆ ಬಿಡುವುದಾಗಿ ಹೇಳಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ. ಮೇಯರ್ ಚುನಾವಣೆ ದಿನಾಂಕಗಳನ್ನು ಘೋಷಿಸಿದಾಗ ಜೆಡಿಎಸ್ ಯಾರನ್ನು ಬೆಂಬಲಿಸುತ್ತದೆ ಎಂದ ಕಾದು ನೋಡಬೇಕಾಗಿದೆ.
Advertisement