ಹೊಸ ಪ್ರಾದೇಶಿಕ ಪಕ್ಷ ಆರಂಭಿಸಲು ಜನಾರ್ಧನ ರೆಡ್ಡಿ ಮುಂದು?: ಇಲ್ಲ ಎಂದ ಸಹೋದರ ಸೋಮಶೇಖರ ರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಲಿದ್ದಾರೆ ಎಂಬ ಗುಸುಗುಸು ಕಲ್ಯಾಣ ಕರ್ನಾಟಕದಲ್ಲಿ ಆರಂಭವಾಗಿದೆ.
ಜನಾರ್ಧನ ರೆಡ್ಡಿ
ಜನಾರ್ಧನ ರೆಡ್ಡಿ

ಕೊಪ್ಪಳ/ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಲಿದ್ದಾರೆ ಎಂಬ ಗುಸುಗುಸು ಕಲ್ಯಾಣ ಕರ್ನಾಟಕದಲ್ಲಿ ಆರಂಭವಾಗಿದೆ.

ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಪಕ್ಷ ಮತ್ತು ಚಿಹ್ನೆಯನ್ನು ನೋಂದಾಯಿಸಲು ರೆಡ್ಡಿ ಈಗಾಗಲೇ ದೆಹಲಿಯಲ್ಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ದೆಹಲಿಯಿಂದ ಹಿಂತಿರುಗಿದ ನಂತರ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ತಮ್ಮ ರಾಜಕೀಯ ಜೀವನದ ಪುನರಾರಂಭ ಕುರಿತು ರೆಡ್ಡಿ ಬೃಹತ್ ರ್ಯಾಲಿ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಜನಾರ್ಧನ ರೆಡ್ಡಿ ಅವರು ಗಂಗಾವತಿಯಿಂದ ಮತ್ತು ಅವರ ಪತ್ನಿ ಅರುಣಾ ರೆಡ್ಡಿ ಗದಗ ಜಿಲ್ಲೆಯಿಂದ ಸ್ಪರ್ಧಿಸುವ ನಿರೀಕ್ಷೆಯಿದೆ.

ತಮ್ಮ ಹೊಸ ಪಕ್ಷವನ್ನು ಬೆಂಬಲಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಅತೃಪ್ತ ನಾಯಕರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೆಡ್ಡಿಯವರು 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಹಿಡಿತವನ್ನು ಹೊಂದಿದ್ದಾರೆ. ಹೀಗಾಗಿ ಅನೇಕ ಸ್ಥಾನವನ್ನು ಗೆಲ್ಲುವ ಸಾಮರ್ಥ್ಯ ಅವರಿಗಿದೆ. ಅವರು ಹೊಸ ಪಕ್ಷ ಸ್ಥಾಪಿಸಿದರೆ ಕನಿಷ್ಠ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆಂದು ರೆಡ್ಡಿಯವರು ಬೆಂಬಲಿಗರು ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ರೆಡ್ಡಿ ಸಾಕಷ್ಟು ಬೆಂಬಲಿಗರನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದ ಅವರು ಇತ್ತೀಚೆಗೆ ಬಿಜೆಪಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ರೆಡ್ಡಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದರೆ, ಬಿಜೆಪಿಯ ಮತಗಳನ್ನು ನಾಶಪಡಿಸುವ ಸಾಧ್ಯತೆಯಿರುವುದರಿಂದ ಬಿಜೆಪಿಗೆ ಹೆಚ್ಚು ಚಿಂತೆಯನ್ನು ತಂದೊಡ್ಡಲಿದೆ ಎನ್ನಲಾಗಿದೆ.

 2013 ರಲ್ಲಿಯೂ ಬಿಜೆಪಿ ಇಂತಹದ್ದೇ ಪರಿಸ್ಥಿತಿಯನ್ನು ಎದುರಿಸಿತ್ತು. ಯಡಿಯೂರಪ್ಪ ಅವರು ಬಿಜೆಪಿ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದರು. ಶ್ರೀರಾಮುಲು ಸಹಾಯದೊಂದಿಗೆ ರೆಡ್ಡಿಯವರು ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಈ ಬೆಳವಣಿಗೆಗಳು ಕಾಂಗ್ರೆಸ್ ಗೆಲ್ಲಲು ಸಹಾಯ ಮಾಡಿತ್ತು.

ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿಯಿಂದ ಬಳ್ಳಾರಿ ಶಾಸಕರಾಗಿರುವ ಜನಾರ್ದನ ರೆಡ್ಡಿ ಸಹೋದರ ಜಿ ಸೋಮಶೇಖರ ರೆಡ್ಡಿ ಅವರು, ಅಂತಹ ಯಾವುದೇ ನಿರ್ಧಾರಗಳನ್ನೂ ತೆಗೆದುಕೊಂಡಿಲ್ಲ ಎಂದಿದ್ದಾರೆ.

ನನ್ನ ಸಹೋದರ ಬಿಜೆಪಿಯನ್ನು ಬಿಡುವುದಿಲ್ಲ ಅಥವಾ ಹೊಸ ಪಕ್ಷವನ್ನು ಪ್ರಾರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನಾರ್ಧನ ರೆಡ್ಡಿ ಹೊಸ ಪಕ್ಷವನ್ನು ಸ್ಥಾಪನೆ ಮಾಡುತ್ತಿಲ್ಲ. ಬದಲಿಗೆ ಬಿಜೆಪಿ ಮೇಲೆ ಒತ್ತಡ ಹೇರವು ಇಂತಹ ಪ್ರಯತ್ನಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಮೂಲಕ ಪಕ್ಷವು ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗುತ್ತಿದ್ದಾರೆ. ಆದರೂ, ರೆಡ್ಡಿ ಅಚ್ಚರಿಗಳಿಗೆ ಹೆಸರುವಾಸಿಯಾಗಿದ್ದು, ಅವರೇ ಹೊಸ ಪಕ್ಷದ ಕುರಿತು ಖಚಿತಪಡಿಸದ ಹೊರತು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com