ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆಯಂತೆ ಇಂದು ಕೂಡ ಸರಣಿ ಪ್ರತಿಭಟನೆಗಳು ಮುಂದುವರಿದಿದೆ.
ಈ ಮಧ್ಯೆ, ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಸಚಿವಾಕಾಂಕ್ಷಿಗಳ ಬೇಡಿಕೆ ಮುಂದುವರಿದಿದೆ. ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅಧಿವೇಶನಕ್ಕೆ ಗೈರಾಗಿದ್ದಾರೆ.
ಇಂದು ಮಧ್ಯಾಹ್ನ ಈಶ್ವರಪ್ಪ ಅವರು ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ. ಇಬ್ಬರು ನಾಯಕರ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರ ಭಾವನೆ ನನಗೆ ಅರ್ಥವಾಗಿದೆ. ಸಂಪುಟ ಕುರಿತು ಹೈಕಮಾಂಡ್ ಜೊತೆ ನಾನು ಮಾತನಾಡಿದ್ದೇನೆ. ವರಿಷ್ಠರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಅವರು ಕಲಾಪಕ್ಕೆ ಬಹಿಷ್ಕಾರ ಹಾಕಿಲ್ಲ, ಗುತ್ತಿಗೆದಾರನ ಸಾವು ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ಸಿಕ್ಕಿದ ಮೇಲೆ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ಈಶ್ವರಪ್ಪ ಜೊತೆ ಕೂಡ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದಿದ್ದಾರೆ.
Advertisement