ಯೋಗ ದಿನಾಚರಣೆಗಾಗಿ ಸಿದ್ಧತೆ
ಯೋಗ ದಿನಾಚರಣೆಗಾಗಿ ಸಿದ್ಧತೆ

ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: 'ಬ್ರ್ಯಾಂಡ್ ಮೋದಿ' ಕಾರ್ಡ್ ಪ್ರಯೋಗ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ.
Published on

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ.

ಬಿಜೆಪಿ ಕರ್ನಾಟಕವನ್ನು ಗೆಲ್ಲಲು ಬಯಸುತ್ತಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಭದ್ರಕೋಟೆ ಎಂದು ಕರೆಯಲ್ಪಡುವ ಹಳೇ ಮೈಸೂರು ಪ್ರದೇಶದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸೆಣಸಾಡುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಚಾರ ಆರಂಭಿಸಲು ಸಿದ್ದವಾಗಿರುವ ಬಿಜೆಪಿ ಮೋದಿ ವರ್ಚಸ್ಸನ್ನು ಬಳಸಿಕೊಳ್ಳಲು ಮುಂದಾಗಿದೆ.

ಜನ್ ಧನ್, ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ, ಮುದ್ರಾ ಯೋಜನೆ, ಜಲ ಮಿಷನ್ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಮೆಗಾ ಸಮಾವೇಶವನ್ನು ಆಯೋಜಿಸುತ್ತಿದೆ. ಜೂನ್ 20 ರಂದು ನಡೆಯುವ ರ್ಯಾಲಿಗೆ ಜನರನ್ನು ಕರೆತರುವ ಬದಲು ಫಲಾನುಭವಿಗಳ ಮೂಲಕ ಮೋದಿ ಸರ್ಕಾರದ ಸಾಧನೆಗಳನ್ನು ಜನಪ್ರಿಯಗೊಳಿಸುವಂತೆ ಪಕ್ಷದ ಹಲವು ಮುಖಂಡರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷವು ಸರ್ಕಾರದ ಸಾಧನೆಗಳನ್ನು ಆಧರಿಸಿ ಮತ ಕೇಳುವುದಾಗಿ ಹೇಳುತ್ತಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಸಮಾವೇಶವು ಅತಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಲಿಂಗಾಯತ ಪ್ರಬಲ ವ್ಯಕ್ತಿ ಬಿ ಎಸ್ ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ ಸೈಡ್ ಲೈನ್ ಗೆ ತಳ್ಳಲ್ಪಟ್ಟಿರುವುದರಿಂದ, ಮತದಾರರನ್ನು ಗೆಲ್ಲಲು ಪಕ್ಷವು ಮೋದಿಯ ಬ್ರಾಂಡ್ ಪ್ರಯೋಗಿಸಲು ಬಯಸಿದೆ. ಹಳೆ ಮೈಸೂರಿನಲ್ಲಿ ಕೇಸರಿ ಕಹಳೆ ಮೊಳಗಿಸುವುದು ಪಕ್ಷದ ಅಜೆಂಡಾವಾಗಿದೆ.

ಪ್ರಧಾನಿ ಮೋದಿ ಫಲಾನುಭವಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯನ್ನು ಬ್ಲಾಕ್ ಅಧ್ಯಕ್ಷರಿಗೆ ಕಳುಹಿಸಲಾಗುವುದು, ಅವರು ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಾರೆ. ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಸರ್ಕಾರಿ ಇಲಾಖೆಗಳು ವಹಿಸುತ್ತವೆ ಎಂದು ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಹೇಳಿದ್ದಾರೆ. ಮೆಗಾ ರ್ಯಾಲಿಯು ಚುನಾವಣೆಯ ಪೂರ್ವದಲ್ಲಿ ಪಕ್ಷಕ್ಕೆ ದೊಡ್ಡ ಹುರುಪು ನೀಡಲಿದೆ ಎಂದಿದ್ದಾರೆ.

ಫಲಾನುಭವಿಗಳ ಕಾರ್ಯಕ್ರಮಕ್ಕೆ ನೀಲನಕ್ಷೆ ಸಿದ್ಧಪಡಿಸಿದ್ದು, ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಎಷ್ಟು ಜನರನ್ನು ಸಜ್ಜುಗೊಳಿಸಬೇಕು ಎಂಬುದರ ಕುರಿತು ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಪ್ರಧಾನಿ ಕಚೇರಿಯಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ, ಎರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ, ಮೆಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com