ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧ: ಸತೀಶ್ ಜಾರಕಿಹೊಳಿ

ಹಿಂದು ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ಮಂಗಳವಾರ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದು ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ಮಂಗಳವಾರ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಹೇಳಿಕೆಯು ತಪ್ಪು ಎಂದಾದರೆ ಕ್ಷಮೆ ಯಾಚಿಸುವುದಷ್ಟೇ ಅಲ್ಲ, ರಾಜೀನಾಮೆಯನ್ನೂ ಕೊಡುತ್ತೇನೆ ಎಂದು ಹೇಳಿದರು.

‘ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಆಳವಾದ ಅಧ್ಯಯನದ ಅನುಭವದಿಂದಲೇ ನಾನು ಈ ಹೇಳಿಕೆ ನೀಡಿದ್ದೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಿರುಗೇಟು ನೀಡಿದರು.

‘ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನು ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ, ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾನು ತಪ್ಪು ಹೇಳಿದ್ದೇನೆಂದು ಸಾಬೀತುಪಡಿಸಿದರೆ ಕ್ಷಮೆಯಾಚಿಸುವುದಷ್ಟೇ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು.

ಹಿಂದು ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ. ಶಬ್ದಕೋಶ ಮತ್ತು ವಿಕಿಪೀಡಿಯಾದಲ್ಲಿ ಇರುವುದನ್ನೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ಸಾರಾಸಗಟಾಗಿ ವಿರೋಧಿಸುವ ಬದಲು, ಸಮರ್ಪಕವಾಗಿ ಪರಿಶೀಲಿಸಲಿ. ಯಾವುದೇ ಧರ್ಮ, ಜಾತಿ, ಸಮಾಜದ ವಿರುದ್ಧ ನಾನು ಹೇಳಿಕೆ ನೀಡಿಲ್ಲ. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಅವರಿಗೆ ಸೂಕ್ತ ಎನಿಸುವ ಸಂಸ್ಥೆಗಳಿಗೆ ತನಿಖೆ ಮಾಡಿಸಲಿ. ನನ್ನ ಜತೆ ಚರ್ಚೆಗೆ ಬಂದರೆ ನಾನೇ ಅವರಿಗೆ ಮನವರಿಕೆ ಮಾಡಿಕೊಡುವೆ. ಚರ್ಚೆಗೆ ಬಂದವರಿಗೆ ದಾಖಲೆ ಸಮೇತ ವಿವರಣೆ ನೀಡಲು ಸಿದ್ಧನಿರುವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com