ಆಕ್ರೋಶದಲ್ಲಿ ಮಾತನಾಡಿದ್ದೇನೆ, ಅಪಮಾನ ಮಾಡುವ ಉದ್ದೇಶ ಇರಲಿಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆಯಾಚಿಸಿದ ಹೆಚ್'ಡಿಕೆ

ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ...
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ.

ಮಂಗಳವಾರ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ನಡೆಯುತ್ತಿತ್ತು, ಈ ವೇಳೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಹಾಗೂ ಮಾಸ್ತೇನಹಳ್ಳಿ ಗ್ರಾಮಕ್ಕೆ ರಥಯಾತ್ರೆ ಬರುತ್ತಿದ್ದ ವೇಳೆ ನೂರಾರು ಶಾಲಾ ಮಕ್ಕಳು ಕುಮಾರಸ್ವಾಮಿ ರಥಯಾತ್ರೆ ಬಳಿ ಬಂದು ಪ್ರತಿಭಟನೆ ನಡೆಸಿದರು.

ಈ ವೇಳೆ ರಥಯಾತ್ರೆ ಬಿಟ್ಟು ಕೆಳಗೆ ಬಂದ ಕುಮಾರಸ್ವಾಮಿಯವರು ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. 3-4 ವರ್ಷಗಳಿಂದ ಸರ್ಕಾರಿ ಶಾಲೆ ಕಟ್ಟಡ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು, ಮಕ್ಕಳಿಗೆ ಪಾಠ ಕೇಳಲು ಕಟ್ಟಡವಿಲ್ಲದೆ ಮಕ್ಕಳು ಅಶ್ವಥಕಟ್ಟೆ, ಹಾಲಿನ ಡೈರಿ, ದೇವಸ್ಥಾನ ಹೀಗೆ ಎಲ್ಲೆಂದರಲ್ಲಿ ಕುಳಿತು ಪಾಠ ಕೇಳುವ ಸ್ಥಿತಿಯನ್ನು ಆಲಿಸಿ ಬೇಸರ ವ್ಯಕ್ತಪಡಿಸಿದರು.

ಬಳಿಕ ಸ್ವತ: ಕುಮಾರಸ್ವಾಮಿಯವರೇ ಮಕ್ಕಳ ಜೊತೆಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಶಾಲಾ ಕಟ್ಟಡ ಸರಿಪಡಿಸಿಕೊಡುವ ಭರವಸೆ ವಾಪಸ್ಸಾಗುತ್ತಿದ್ದರು.

ಬಳಿಕ ಕಾರು ಹತ್ತಿದ ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ ಕೆಟ್ಟ ಭಾಷೆಯಲ್ಲಿ ನಿಂದಿಸಿದ್ದರು. ಇದರ ವಿಡಿಯೋ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಕುಮಾರಸ್ವಾಮಿಯವರು ಬಳಸಿದ ಪದಗಳಿಗೆ ಟೀಕೆಗಳು ವ್ಯಕ್ತವಾಗತೊಡಗಿದವು.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಹೇಳಿದ್ದಾರೆ.

ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ  ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com