ಮೈಸೂರು: ನವೆಂಬರ್ 1ರಂದು ಬಿಡುಗಡೆ ಮಾಡಲಿರುವ ಪಕ್ಷದ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ.
ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿಯನ್ನು ಬೇಡಿಕೊಂಡಿದ್ದೇನೆ. ತಾಯಿಯ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಉಚಿತವಾಗಿ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು ಮತ್ತು ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನೂ ಸ್ವೀಕರಿಸಿದ್ದೇನೆ.
ಜನರು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸರ್ಕಾರ ನಡೆಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ' ಎಂದರು. ಜನಪರ ಯೋಜನೆಗಳನ್ನು ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟು ಗೆಲ್ಲಬೇಕು ಎನ್ನುವುದು ನನ್ನ ಗುರಿಯಾಗಿದೆ' ಎಂದರು.
Advertisement