ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಕುಮಾರಸ್ವಾಮಿ

ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ  ಸವಾಲು ಹಾಕಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ  ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು.

ಮುಂಬರುವ ಚುನಾವಣೆ ಹಾಗೂ ಜೆಡಿಎಸ್ ನ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆ ನಂತರ ಸುದ್ದಿಗಾರರ ಜತೆ ಮಾಜಿ ಸಿಎಂ ಮಾತನಾಡಿದರು. ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ಗರಂ ಆದರು.

ಫೆರಿಫೆರಲ್ ರಿಂಗ್ ರೋಡ್ ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಆ  ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದರು.

ಬಿಬಿಎಂಪಿ ಬಿಜೆಪಿ  ಕೈಯಲ್ಲೇ ಇತ್ತು. ಅವರು ಏನೆಲ್ಲ ಮಾಡಿದ್ದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ದಾಖಲೆಗಳಿದ್ದ ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿದ್ದು ಇವರ ಸಾಧನೆ ಅಷ್ಟೇ. ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.

ಸರ್ಕಾರಿ ಜಮೀನು ಲೂಟಿ ಹೊಡೆಯುವ ಬಗ್ಗೆ ಸದನ ಸಮಿತಿ ಮಾಡಿದ್ದೆ. ಯಾರ ಕಾಲದಲ್ಲಿ ಏನಾಗಿದೆಯೆಂದು ಮುಖ್ಯಮಂತ್ರಿಗಳು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

ಕೆಂಪೇಗೌಡರ ಹೆಸರಿನಲ್ಲಿ ಬಿಜೆಪಿ ಪ್ರಚಾರ ಪಡೆಯುತ್ತಿದೆ
ಈಗೇನೋ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಣ್ಣು ಸಂಗ್ರಹ ಮಾಡಿ ಥೀಮ್ ಪಾರ್ಕ್ ಮಾಡುತ್ತೇನೆ ಅಂತಿದ್ದಾರೆ. ಸೀಮಾಂಧ್ರದ ರಾಜಧಾನಿ ಅಮರಾವತಿ ಕಟ್ಟಲು ಮಣ್ಣು ತಂದಿದ್ದರು ಮೋದಿ. ಏನು ಆಯ್ತು ಆ ಮಣ್ಣು? ಈಗ ರಾಜ್ಯದಲ್ಲಿ ಮಣ್ಣಿನ ಸಂಗ್ರಹ ಮಾಡುತ್ತಾರಂತೆ. ಮೊದಲು ಮಳೆಯಿಂದ ಆಗಿರುವ ಸಮಸ್ಯೆಯಿಂದ ಜನರಿಗೆ, ರೈತರಿಗೆ ಅನುಕೂಲ ಮಾಡಿಕೊಡ್ರಪ್ಪ ಎಂದು ವ್ಯಂಗ್ಯವಾಡಿದ ಎಚ್ ಡಿಕೆ, ಇವರದ್ದೆಲ್ಲ ಕೇವಲ ಪ್ರಚಾರ ಅಷ್ಟೆ. ಕಳೆದ ಬಾರಿ ಸಿಎಂ ಪ್ರದಕ್ಷಿಣೆ ಹಾಕಿದ್ದರು. ಸಮಸ್ಯೆ ಪರಿಹಾರ ಆಗಿಲ್ಲ. ಇದಕ್ಕಿಂತ ಉದಾಹರಣೆ ಬೇಕಾ? ಎಂದು ಸಿಎಂ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com