ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್ನಿಂದ ದಲಿತ ಸಿಎಂ ಮಾಡುವೆ: ಎಚ್ಡಿಕೆ ಭಾವುಕ ನುಡಿ
ಜೆಡಿಎಸ್ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Published: 15th April 2022 01:10 PM | Last Updated: 15th April 2022 01:33 PM | A+A A-

ಎಚ್.ಡಿ ಕುಮಾರಸ್ವಾಮಿ
ಮಳವಳ್ಳಿ: ಜೆಡಿಎಸ್ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಹಿಂದೆ ನಮ್ಮ ಪಕ್ಷ ಹಾಸನ ಜಿಲ್ಲಾ ಪಂಚಾಯಿತಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಿತ್ತು. ಆಮೇಲೆ ಅನೇಕ ದಲಿತ ನಾಯಕರು ಪಕ್ಷದಲ್ಲಿ, ಸರ್ಕಾರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರು" ಎಂದರು.
ಆ ಸಂದರ್ಭದಲ್ಲಿ ನನ್ನ ಸಹೋದರ ರೇವಣ್ಣ ಅವರೂ ಮೊದಲ ಬಾರಿಗೆ ಜಿಲ್ಲಾ ಪಂಚಾಯಿತಿಗೆ ಗೆದ್ದು ಬಂದಿದ್ದರು. ಆದರೆ, ದೇವೇಗೌಡರು ಎಂಎ ಪದವೀಧರನಾಗಿದ್ದ ದಲಿತ ಅಭ್ಯರ್ಥಿಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿದ್ದರು. ಮುಂದಿನ ದಿನಗಳಲ್ಲಿ ಜಾತ್ಯತೀತ ಜನತಾದಳದಿಂದ ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಬಂದೇ ಬರುತ್ತದೆ. ನಾನು ಭೂಮಿಗೆ ಹೋಗುವ ಮುನ್ನ ದಲಿತ ಮುಖ್ಯಮಂತ್ರಿಯನ್ನು ಮಾಡುತ್ತೇನೆ. ಈ ನಿರೀಕ್ಷೆಯನ್ನು ಜೆಡಿಎಸ್ ಸಾಕಾರಗೊಳಿಸುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆಗಳಲ್ಲಿ ಜನರಿಂದ ರಾಷ್ಟ್ರೀಯ ಪಕ್ಷ ತಿರಸ್ಕಾರ: ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್!
ನಾನು ಮೊದಲಿನಿಂದಲೂ ಜಾತ್ಯತೀತ, ಧರ್ಮಾತೀತವಾಗಿ ಕೆಲಸ ಮಾಡಿಕೊಂಡು ಬರುತ್ತೇನೆ. ನನ್ನನ್ನು ದಿನನಿತ್ಯವೂ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದಲೂ ಬಂದು ಭೇಟಿ ಮಾಡುತ್ತಾರೆ. ಅವರನ್ನೆಲ್ಲ ನಾನು, ನೀವು ಯಾವ ಜಾತಿ? ಯಾವ ಧರ್ಮ? ಎಂದು ಎಂದೂ ಕೇಳಿಲ್ಲ. ನಿಮ್ಮ ಕಷ್ಟವೇನು? ಎಂದಷ್ಟೇ ಕೇಳುತ್ತೇನೆ. ಇದು ನಾನು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿರುವ ಧರ್ಮ ಎಂದು ಅವರು ಹೇಳಿದರು.
ನನಗೆ ಐದು ವರ್ಷ ಅಧಿಕಾರ ಕೊಡಿ. ನೀವು ನೆನಪಲಿಟ್ಟುಕೊಳ್ಳುವ ಕೆಲಸ ಮಾಡುತ್ತೇನೆ. ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಹಂಗಿನ ಸರಕಾರ ಖಂಡಿತಾ ಬೇಡ. ರಾಜ್ಯವು ಕಳೆದ ಎಪ್ಪತ್ತೈದು ವರ್ಷಗಳಲ್ಲಿ ನೀರಾವರಿ ವಿಷಯಕ್ಕೆ ಸಂಬಂಧಿಸಿ ಅನ್ಯಾಯಕ್ಕೆ ತುತ್ತಾಗಿದೆ. ನನಗೆ ಐದು ವರ್ಷ ಅಧಿಕಾರ ಕೊಟ್ಟು ನೋಡಿ. ಆ ಅನ್ಯಾಯವನ್ನು ಐದೇ ವರ್ಷಗಳಲ್ಲಿ ಸರಿ ಮಾಡುತ್ತೇನೆ. ಇಲ್ಲವಾದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಅವರು ಘೋಷಣೆ ಮಾಡಿದರು.