ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಸಾಯಿ ಲೇಔಟ್‌ ತೇಲುತ್ತಿದೆ, ಅರ್ಕಾವತಿ ಆರ್ತನಾದ ಕೇಳುತ್ತಿಲ್ಲವೆ? ನಾಯಿ ಸತ್ತ ದೃಶ್ಯ ನೋಡಿ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾರು?: HDK

ಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ?  ಕೊಲೆಗಳನ್ನೇ ಸೋಪಾನ ಮಾಡಿಕೊಂಡು ʼಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚುತ್ತಾನೆಯೇ?

ಬೆಂಗಳೂರು: ತಮ್ಮ ಕಣ್ಣೀರಿನ ಬಗ್ಗೆ ಕೆಣಕಿದ ಬಿಜೆಪಿ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.‌ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ‘ಸಿನಿಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಕಣ್ಣೀರು ಸುರಿಸಿದ ಮಹಾಶಯ ಯಾವ ಪಕ್ಷದ ಮುಖ್ಯಮಂತ್ರಿ’ ಎಂದು ಕುಟುಕಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ‘ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದಾಗ ನಾನು, ನನ್ನ ಅಣ್ಣ, ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇದೇನಾ ಸಂಘ ಕಲಿಸಿದ ಸಂಸ್ಕಾರ? ಛೇ!’ ಎಂದು ಛೇಡಿಸಿದ್ದಾರೆ.

‘ಆಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ಬಿಜೆಪಿ ವಿಕೃತ, ವಿಲಕ್ಷಣ, ವಿನಾಶಕಾರಿ ಪಕ್ಷ. ಬಡ ಯುವಕರ ರಕ್ತವೇ ಅವರ ಪಾಲಿನ ಅಧಿಕಾರಾಮೃತ. ಕಗ್ಗೊಲೆಗಳೇ ಅದರ ಕಸುಬು, ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ?  ಎಂದು ಪ್ರಶ್ನಿಸಿದ್ದಾರೆ.

ನಾನು ಇನ್ನೊಬ್ಬರ ಕಣ್ಣೀರಿನ ಬಗ್ಗೆ, ಭಾವೋದ್ವೇಗದ ಕುರಿತು ಲಘುವಾಗಿ ಮಾತನಾಡಲಾರೆ. ಆದರೂ ವಿಕೃತಿ ಬಿಜೆಪಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ. ಅಧಿಕಾರ ಹೋಗುತ್ತದೆ ಎಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ʼನಲ್ಲಿ ವಿದಾಯ ಭಾಷಣ ಮಾಡುತ್ತಾ ವೇದಿಕೆಯ ಮೇಲೆಯೇ ಕಣ್ಣೀರಧಾರೆ ಹರಿಸಿದವರು ಯಾವ ಪಕ್ಷದವರು? ಪ್ರವಾಹಕ್ಕೆ ತುತ್ತಾಗಿ ಸತ್ತವರ ಬಗ್ಗೆ ಹನಿ ಕಂಬನಿ ಇಲ್ಲ, ಪಾತಕ ರಾಜಕೀಯಕ್ಕೆ ನಡುರಸ್ತೆಗಳಲ್ಲಿ ಕೊಲೆಯಾದ ಯುವಕರ ಬಗ್ಗೆ ಎಳ್ಳಷ್ಟು ಕರುಣೆ ಇಲ್ಲ. ಬಣ್ಣದ ಮಾತು, ಕೃತಕ ಸಾಂತ್ವನ!! ಆದರೂ, ಸಿನಿಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಗಳಗಳನೇ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾವ ಪಕ್ಷದ ಮುಖ್ಯಮಂತ್ರಿಗಳು? ಸ್ವಲ್ಪ ಹೇಳಿ? ಎಂದು ಕಾಲೆಳೆದಿದ್ದಾರೆ.

‘30 ಸೀಟು ಉಳಿಸಿಕೊಳ್ಳಲು ನಾವು ಹೆಣಗುತ್ತಿದ್ದೇವೆ ಎನ್ನುತ್ತೀರಿ. ಅಧಿಕಾರಕ್ಕಾಗಿ ಇದೇ 30 ಸೀಟಿನ ಪಕ್ಷದ ಬಾಗಿಲಿಗೆ ಬಂದು ನಿಂತಿದ್ದನ್ನು ಮರೆತುಬಿಟ್ಟಿರಾ? ದೇಶದ ತುಂಬ ‘ಆಪರೇಷನ್‌ ಕಮಲದ ಗಬ್ಬುನಾತ ಹಬ್ಬಿದೆ. ಅಸಹ್ಯ ಎನಿಸುವುದಿಲ್ಲವೇ ನಿಮಗೆ?’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು. ಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ?  ಕೊಲೆಗಳನ್ನೇ ಸೋಪಾನ ಮಾಡಿಕೊಂಡು ʼಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚುತ್ತಾನೆಯೇ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಕಟುಕಿದ್ದಾರೆ.

ಸಾಯಿ ಲೇಔಟ್‌ ಪುನಾ ತೇಲುತ್ತಿದೆ. ಅರ್ಕಾವತಿ ಲೇಔಟ್‌ ಪಕ್ಕದ ಆರ್ತನಾದ ಕೇಳುತ್ತಿಲ್ಲವೆ ಬಿಜೆಪಿಗರೇ? ಬೆಂಗಳೂರಿನ ಬಹುತೇಕ ಪ್ರದೇಶಗಳು ಜಲಾವೃತವಾಗಿ ದ್ವೀಪಗಳಾಗಿವೆ. ಅಲ್ಲಿ ಹರಿಯುತ್ತಿರುವುದು ನಿಜಕ್ಕೂ ಜನರ ಕಣ್ಣೀರಧಾರೆ. ʼಕೊಮುಪೊರೆʼಯ ಅಮಲಿನಲ್ಲಿ ಮುಚ್ಚಿಹೋಗಿರುವ ನಿಮ್ಮ ಕಣ್ಣುಗಳಿಗೆ ಜನರ ಕಣ್ಣೀರು ಕಾಣುವುದಿಲ್ಲ, ಅಲ್ಲವೇ? ಸರಣಿ ಕಗ್ಗೊಲೆಗಳು,ಆಚಾರ,ವಿಚಾರ,ವ್ಯಾಪಾರ,ಉಡುಗೆ-ತೊಡುಗೆ; ಅಷ್ಟೇ ಏಕೆ? ತಿನ್ನುವ ಅನ್ನದಲ್ಲೂ ನಿಮ್ಮ ವಿಕೃತಿ ಮೆರೆದಿದೆ. ತಂದೆ-ಮಕ್ಕಳ ಬಾಂಧವ್ಯದ ಬಗ್ಗೆ ವಿಕೃತಿ ತೋರುವ ನಿಮಗೆ, ಬಾಂಧವ್ಯಗಳ ಬಗ್ಗೆ ಜನರೇ ಪಾಠ ಕಲಿಸುವ ದಿನ ಹತ್ತಿರದಲ್ಲಿದೆ. ನಾವು ಮುಳುಗುವುದು, ತೇಲುವುದು ಆಮೇಲೆ. ನಿಮ್ಮನ್ನು ಜನ ಮುಳುಗಿಸಿಬಿಟ್ಟಾರು! ಎಚ್ಚರಿಕೆ ಎಂದು ಎಚ್,ಡಿ ಕೆ ಸಂದೇಶ ರವಾನಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com