ಬೊಮ್ಮಾಯಿ ಬದಲಾವಣೆ, ಕಾಂಗ್ರೆಸ್ ಟ್ವೀಟ್ ಬಗ್ಗೆ ನನಗೆ ಗೊತ್ತಿಲ್ಲ, ಟ್ವೀಟ್ ಮಾಡಿದವರನ್ನೇ ಕೇಳಿ: ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣ ಮಾಡಿದೆ. 
ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಿ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ
ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಿ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣ ಮಾಡಿದೆ. 

ಈ ಬಗ್ಗೆ ಹುಬ್ಬಳ್ಳಿಯಲ್ಲಿ ನಿನ್ನೆ ಸಂಜೆ ಹೇಳಿಕೆ ನೀಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಳೆದ ವರ್ಷ ಬಿಜೆಪಿಯಲ್ಲಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಬಗ್ಗೆ ಸಿದ್ದರಾಮಯ್ಯನವರಲ್ಲಿ ಪ್ರತಿಕ್ರಿಯೆ ಕೇಳಿದಾಗ, ಬಿಜೆಪಿಯಲ್ಲಿ ಸಿಎಂ ಮೂರನೇಯವರಾದ್ರು ಬರಲಿ ನಾಲ್ಕನೇಯವರಾದ್ರೂ ಬರಲಿ. ಸಿಎಂ ಬದಲಾವಣೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆಯಲ್ಲವೇ ಎಂದು ಕೇಳಿದಾಗ ಟ್ವೀಟ್ ಮಾಡಿದವರನ್ನ ಹೋಗಿ ಕೇಳಿ, ನಾನಂತೂ ಟ್ವೀಟ್ ಮಾಡಿಲ್ಲ ಎಂದು ಹೇಳಿದರು. ಅಂದರೆ ಕಾಂಗ್ರೆಸ್ ಟ್ವೀಟ್ ನಿಂದ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. 

ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ: ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. 

ಬಾದಾಮಿಯಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿದ್ದರಾಮಯ್ಯನವರು ಮುಂದಿನ ಬಾರಿ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಷಯ ಬಹಳ ಚರ್ಚೆಯಾಗುತ್ತಿರುತ್ತದೆ. ಈ ಬಗ್ಗೆ ಕೂಡ ಪ್ರತಿಕ್ರಿಯಿಸಿರುವ ಸಿದ್ದರಾಮ್ಯಯ, ಬಾದಾಮಿಯಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಸದ್ಯ ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನೇ ಹೇಳುತ್ತೇನೆ. ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ನನಗೆ ಗೊತ್ತಿಲ್ಲ. ಕಾನೂನು ವಿವಾದದ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com