ವಿಜಯನಗರ: ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಆನಂದ್ ಸಿಂಗ್, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್ ಅವರಿಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಅವರು ನೀಡಿರುವ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಈ ಹಿಂದೆ ಉಮೇಶ್ ಕತ್ತಿ ಅವರು ಕೂಡ ಆಗಾಗ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದರು. ಉಮೇಶ್ ಕತ್ತಿ ಅವರ ಬಳಿಕ ಈಗ ಆನಂದ್ ಸಿಂಗ್ ಅವರು ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಪರ ಧ್ವನಿ ಎತ್ತಿದ್ದಾರೆ.
Advertisement