ಸಿದ್ದರಾಮಯ್ಯ
ಸಿದ್ದರಾಮಯ್ಯ

ಸಿದ್ದರಾಮಯ್ಯ ಹುಟ್ಟುಹಬ್ಬದ ಹೆಸರಲ್ಲಿ ಹಣದ ಆಟ, ರಾಜಕೀಯ ಮೇಲಾಟ: 'ಸಿದ್ದರಾಮೋತ್ಸವ'ಕ್ಕೆ 25 ಕೋಟಿ ರು.!

2023ರ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಬಲ ರಾಜಕೀಯ ಸಂದೇಶ ರವಾನಿಸುವ ಉದ್ದೇಶದಿಂದ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಕನಿಷ್ಠ 25 ಕೋಟಿ ರೂ ಖರ್ಚು ಮಾಡಲಾಗುತ್ತಿದೆ.
Published on

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಬಲ ರಾಜಕೀಯ ಸಂದೇಶ ರವಾನಿಸುವ ಉದ್ದೇಶದಿಂದ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಕನಿಷ್ಠ 25 ಕೋಟಿ ರೂ ಖರ್ಚು ಮಾಡಲಾಗುತ್ತಿದೆ.

ಸುಮಾರು 100 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದರೂ ನಾಯಕರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಈ ಕಾರ್ಯಕ್ರಮವನ್ನು ಬಹಳ ಹಿಂದೆಯೇ ಆಯೋಜಿಸಲಾಗಿತ್ತು. ಸಿಎಂ ಆಗಿ ಸಿದ್ದರಾಮಯ್ಯ ಅವರ ಕೊಡುಗೆಯನ್ನು ಗಮನಿಸಿದರೆ ಅವರನ್ನು ಕಾಂಗ್ರೆಸ್ ಅಥವಾ ಒಂದು ನಿರ್ದಿಷ್ಟ ಸಮುದಾಯದ ನಾಯಕ ಎಂದು ಕರೆಯಲು ಸಾಧ್ಯವಿಲ್ಲ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೇರಿದ 50 ಎಕರೆ ಜಾಗದಲ್ಲಿ ವೇದಿಕೆ ಸಜ್ಜುಗೊಳಿಸಿ, ರಾಜ್ಯದ ವಿವಿಧ ಭಾಗಗಳಿಂದ ಸುಮಾರು 5 ಲಕ್ಷ ಜನರನ್ನು ಕರೆದೊಯ್ಯಲಾಗಿದೆ. ಆಹಾರವನ್ನು ತಯಾರಿಸಲು ಬರೋಬ್ಬರಿ 2.5 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಸಮಿತಿಯ ಪ್ರಮುಖರಾದ ಆರ್.ವಿ.ದೇಶಪಾಂಡೆ, ಕೆ.ಎನ್.ರಾಜಣ್ಣ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಬೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ ಅವರು ಮೆಗಾ ಶೋ ನಡೆಸಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

2023ರ ವಿಧಾನಸಭಾ ಚುನಾವಣೆಯ ನಂತರ ಪಕ್ಷ ಅಧಿಕಾರಕ್ಕೆ ಬಂದರೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಕನಸು ಹೊತ್ತಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಕೆಲವು ನಾಯಕರು ಉದಾರವಾಗಿ ಕೊಡುಗೆ ನೀಡಲು ಬದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಆಪ್ತರಾಗಿದ್ದು, ಸಿದ್ದರಾಮೋತ್ಸವದಲ್ಲಿ ರಾಹುಲ್ ಭಾಗವಹಿಸುವ ಸಾಧ್ಯತೆಯಿದೆ, ಹೀಗಾಗಿ ಎಲ್ಲಾ ರಾಜ್ಯ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಪರ ಮೃದು ಧೋರಣೆ ತಳೆದಿದ್ದಾರೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com