ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೊಮ್ಮಾಯಿ ಸರ್ಕಾರಕ್ಕೆ ವರ್ಷ: ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಬೃಹತ್ ಸಮಾವೇಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜುಲೈ 28 ರಂದು ಬೆಂಗಳೂರಿನಿಂದ 40 ಕಿಮೀ ದೂರದಲ್ಲಿರುವ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸುತ್ತಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜುಲೈ 28 ರಂದು ಬೆಂಗಳೂರಿನಿಂದ 40 ಕಿಮೀ ದೂರದಲ್ಲಿರುವ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸುತ್ತಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದ್ದು, ಅಂದು ಸರ್ಕಾರ ಪ್ರತ್ಯೇಕ ಕಾರ್ಯಕ್ರಮ ನಡೆಸಲಿದೆ ಎಂದು ಬೊಮ್ಮಾಯಿ ತಿಳಿಸಿದರು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಸುಮಾರು 1 ಲಕ್ಷ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು,  ಬೊಮ್ಮಾಯಿ ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಎತ್ತಿ ಹಿಡಿಯಲು ನಿರ್ಧರಿಸಲಾಗಿದೆ. 

ಅನೇಕ ಕೇಂದ್ರ ಸಚಿವರು ಸಮಾವೇಶದಲ್ಲಿ ಭಾಗವಹಿಸುವುದರೊಂದಿಗೆ ವಿವಿಧ ವಿಷಯಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಿಂದ ಟೀಕೆಗೆ ಗುರಿಯಾಗಿರುವ ಬೊಮ್ಮಾಯಿ ಸರ್ಕಾರವನ್ನು ಬಲವಾಗಿ ಬೆಂಬಲಿಸುವ ಸಂದೇಶವನ್ನು ರವಾನಿಸಲಾಗುತ್ತಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್‌.ರವಿಕುಮಾರ್‌ ಮಾತನಾಡಿ, ಬೆಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ನಡೆಸಿದರೆ ಸಂಚಾರ ದಟ್ಟಣೆ ಉಂಟಾಗಬಹುದು ಎಂಬ ಕಾರಣಕ್ಕೆ ದೊಡ್ಡಬಳ್ಳಾಪುರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. 

ಸರ್ಕಾರದ ಕಾರ್ಯಕ್ರಮಗಳನ್ನು ಜನಪ್ರಿಯಗೊಳಿಸಲು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿ ತಿಂಗಳು ಎರಡು ಸಮಾವೇಶ ಆಯೋಜಿಸಲು ಪಕ್ಷ ಯೋಜಿಸುತ್ತಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಬೊಮ್ಮಾಯಿ ಅವರು 50 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ಕಾರಿ ಕಾರ್ಯಕ್ರಮಗಳ ಫಲಾನುಭವಿಗಳ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷವನ್ನು ಬಲಪಡಿಸಲು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಹಳೇ ಮೈಸೂರು ಮತ್ತು ಕಲ್ಯಾಣ-ಕರ್ನಾಟಕ ಭಾಗದ ಅನೇಕ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮಹೇಶ್ ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com