ಪರಿಷತ್ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಪ್ರಗತಿಯಲ್ಲಿ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ. ನಾಲ್ಕು ಮಹಿಳೆಯರು ಸೇರಿದಂತೆ 49 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜೂನ್ 15 ರಂದು ಮತಗಳ ಎಣಿಕೆ ನಡೆಯಲಿದೆ. 607 ಮತಗಟ್ಟೆಗಳಲ್ಲಿ 2, 84,922 ಶಿಕ್ಷಕರು ಹಾಗೂ ಪದವೀಧರರು ಮತ ಚಲಾಯಿಸುವ ನಿರೀಕ್ಷೆಯಿದೆ.

ನಾಲ್ಕು ಮಹಿಳೆಯರು ಸೇರಿದಂತೆ ಒಟ್ಟು 49 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎಲ್ಲಾ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ವಾಯವ್ಯ ಪದವೀಧರರನ್ನು ಹೊರತುಪಡಿಸಿ ಉಳಿದೆಲ್ಲ ಸ್ಥಾನಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.  75 ಸದಸ್ಯರ ಮೇಲ್ಮನೆಯಲ್ಲಿ ಬಿಜೆಪಿ ಸರ್ಕಾರ ತನ್ನ ಬಹುಮತವನ್ನು ಉಳಿಸಿಕೊಳ್ಳಲು ಫಲಿತಾಂಶ ಮುಖ್ಯವಾಗಿದೆ.

ಬಿಜೆಪಿಯ ಹಣಮಂತ ನಿರಾಣಿ (ವಾಯುವ್ಯ ಪದವೀಧರ) ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ (ದಕ್ಷಿಣ ಪದವೀಧರ), ಬಿಜೆಪಿಯ ಅರುಣ್ ಶಹಾಪುರ (ವಾಯುವ್ಯ ಶಿಕ್ಷಕರ ಕ್ಷೇತ್ರ) ಮತ್ತು ಜೆಡಿಎಸ್‌ನ ಬಸವರಾಜ ಹೊರಟ್ಟಿ (ಪಶ್ಚಿಮ ಶಿಕ್ಷಕ ಕ್ಷೇತ್ರ) ಅವರ ಅವಧಿ ಜುಲೈ 4 ರಂದು ಕೊನೆಗೊಳ್ಳುತ್ತಿರುವ ಕಾರಣ ಚುನಾವಣೆ ಅನಿವಾರ್ಯವಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ವಿಧಾನಪರಿಷತ್ ಸಭಾಪತಿ ಹೊರಟ್ಟಿ ಕಣಕ್ಕಿಳಿದಿದ್ದಾರೆ.

ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಅರುಣ್ ಶಹಪೂರ್ ಮತ್ತು ಕಾಂಗ್ರೆಸ್ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಎಂಎಲ್ಸಿ ಎಂವಿ ರವಿಶಂಕರ್, ಕಾಂಗ್ರೆಸ್‌ನಿಂದ ಮಧು ಜಿ ಮಾದೇಗೌಡ ಮತ್ತು ಜೆಡಿಎಸ್‌ನಿಂದ ಎಚ್‌ಕೆ ರಾಮು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com