ಕುರ್ಚಿಗಾಗಿ ಪಕ್ಷ ಸೇರಬೇಡಿ, ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಗೆ ಬನ್ನಿ: ಮಲ್ಲಿಕಾರ್ಜುನ ಖರ್ಗೆ

ಶಾಸಕನಾಗಬೇಕು, ಸಚಿವನಾಗಬೇಕು, ಸಿಎಂ ಆಗಬೇಕು ಎಂದು ಕುರ್ಚಿಗಾಗಿ ಪಕ್ಷ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಶಾಸಕನಾಗಬೇಕು, ಸಚಿವನಾಗಬೇಕು, ಸಿಎಂ ಆಗಬೇಕು ಎಂದು ಕುರ್ಚಿಗಾಗಿ ಪಕ್ಷ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ತವರು ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಬಳಿಕ ಅರಮನೆ ಮೈದಾನದಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ. ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಹೇಳಿದರು.

ಕಳೆದ 70 ವರ್ಷಗಳಿಂದ ಏನು ಮಾಡಿದ್ದೀರೆಂದು ಪ್ರಧಾನಿ ನರೇಂದ್ರ ಮೋದಿ ಕೇಳುತ್ತಾರೆ. ನಾವು ಕೆಲಸ ಮಾಡಿದ್ದರಿಂದಲೇ ದೇಶ ಈ ಹಂತಕ್ಕೆ ಬೆಳೆದಿದೆ. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿದೆ. ಹಿಂದಿನ ಯಾವ ಸರ್ಕಾರ ಈ ರೀತಿ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

ಪದೇಪದೆ ಕಾಂಗ್ರೆಸ್‌ ಪಕ್ಷದ ನಾಯಕರನ್ನು ಟೀಕೆ ಮಾಡುವುದು ಸರಿಯಲ್ಲ. ದೇಶಕ್ಕಾಗಿ ಗಾಂಧಿ ಕುಟುಂಬದ ತ್ಯಾಗ, ಕೊಡುಗೆ ಸಾಕಷ್ಟಿದೆ. ಇದರಲ್ಲಿ ಸ್ವಲ್ಪನಾದರೂ ನೀವು ಕೊಟ್ಟಿದ್ದರೆ ದೇಶ ಮತ್ತಷ್ಟು ಅಭಿವೃದ್ಧಿಯಾಗುತ್ತಿತ್ತು. ತಾಯಿ, ಮಕ್ಕಳ ಪಕ್ಷವೆಂದು ಪ್ರಧಾನಿ ಮೋದಿ ಕಾಂಗ್ರೆಸ್​ನ್ನು ಟೀಕಿಸುತ್ತಾರೆ. ನಮ್ಮ ಪಕ್ಷದ ಆಂತರಿಕ ವಿಚಾರ ನಿಮಗೇಕೆ? ಜನ ನಿಮಗೆ ಅವಕಾಶ ಕೊಟ್ಟಿದ್ದಾರೆ, ದೇಶದ ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ತಿರುಗೇಟು ನೀಡಿದರು.

ಭಾರತ್‌ ಜೋಡೋ ಯಾತ್ರೆಯಿಂದ ಬಿಜೆಪಿಯವರಿಗೆ ನಡುಕ ಹುಟ್ಟಿದೆ. ಭಾರತ್‌ ಜೋಡೋ ಯಾತ್ರೆ ಬಳಿಕ ಪ್ರಧಾನಿ ಮೋದಿ ಎಚ್ಚೆತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿಗೆ ಹಿನ್ನಡೆ ಆಗಿದೆ.  ಹೀಗಾಗಿ ಒಗ್ಗಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com