ಬೆಂಗಳೂರು: ಇತ್ತೀಚಿಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ.
ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದ ತ್ರಿಪುರವಾಸಿನಿ ಗೇಟ್ ನಂಬರ್ 2 ರಲ್ಲಿ ಸರ್ವೋದಯ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನೇ ತಮ್ಮ ಜೀವನದ ಮೌಲ್ಯವನ್ನಾಗಿಸಿಕೊಂಡ ಖರ್ಗೆ, ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪಯಣ ಆರಂಭಿಸಿ, ಇದೀಗ ಪಕ್ಷದ ಉನ್ನತ ಹುದ್ದೆ ಅಲಂಕರಿಸುವ ಮೂಲಕ ಮಾದರಿಯಾಗಿದ್ದಾರೆ.
9 ಬಾರಿ ಶಾಸಕರಾಗಿ ಮೂರು ಬಾರಿ ಸಂಸದರಾಗಿ, ಲೋಕಸಭಾ ಹಾಗೂ ರಾಜ್ಯಸಭಾ ವಿಪಕ್ಷ ನಾಯಕರಾಗಿ, ಸಂವಿಧಾನದ 371 (ಜೆ) ಆರ್ಟಿಕಲ್ ಜಾರಿ ಮಾಡಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ಅದ್ದೂರಿ ಸ್ವಾಗತ ಕೋರಲಾಗುತ್ತಿದೆ.
Advertisement