ಜನಸಂಕಲ್ಪ ಯಾತ್ರೆ ಬಳಿಕ ಉತ್ತರ-ದಕ್ಷಿಣದಲ್ಲಿ ಬಿಜೆಪಿಯಿಂದ ರಥಯಾತ್ರೆ: ಸಿಎಂ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಯ ಬಳಿಕ ಬಿಜೆಪಿಯ ರಥಯಾತ್ರೆ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಎರಡೂ ಕಡೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.
ಉಡುಪಿಯಲ್ಲಿ ಸಿಎಂ ಬೊಮ್ಮಾಯಿ
ಉಡುಪಿಯಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು: ಜನಸಂಕಲ್ಪ ಯಾತ್ರೆಯ ಬಳಿಕ ಬಿಜೆಪಿಯ ರಥಯಾತ್ರೆ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಎರಡೂ ಕಡೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಉಡುಪಿಯಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ಎಲ್ಲೆಡೆ ಬಿಜೆಪಿ ಪರ ಅಲೆ ಎದ್ದಿದೆ ಹಾಗೂ ಕಾರ್ಯಕರ್ತರಲ್ಲೂ ವಿಶ್ವಾಸ, ಹುರುಪು ಮೂಡುತ್ತಿದೆ. ಈ ಯಾತ್ರೆ ಮುಗಿದ ನಂತರ ರಾಜ್ಯದ ಉತ್ತರ ಮತ್ತು ದಕ್ಷಿಣ ದಿಕ್ಕುಗಳಲ್ಲಿ ರಥಯಾತ್ರೆಯನ್ನು ನಡೆಸುತ್ತೇವೆ ಎಂದು ಹೇಳಿದರು.

ಈ ರಥಯಾತ್ರೆ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕಣ್ತೆರಸಲಿದೆ. ಪ್ರತಿ ಕ್ಷೇತ್ರದಲ್ಲೂ ಜನರನ್ನು ಒಟ್ಟುಗೂಡಿಸಿ ಪಕ್ಷವನ್ನು ಬಲಪಡಿಸುವುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಪರ ಅಲೆ ಇದೆ ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕದ ಜನರು ಕಾಂಗ್ರೆಸ್ ಆಯ್ಕೆ ಮಾಡಲು ಸಂಕಲ್ಪ ಮಾಡಿದ್ದಾರೆ ಎಂಬ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅಧಿಕಾರದಲ್ಲಿದ್ದಾಗ ಜನರು ಅವರನ್ನು ತಿರಸ್ಕರಿಸಿದ್ದರು. ಕಾಂಗ್ರೆಸ್ ಪಕ್ಷದ ಆಂತರಿಕ ಹೋರಾಟ, ಸಮಾಜವನ್ನು ಒಡೆಯುವ ಮತ್ತು ಕರ್ನಾಟಕವನ್ನು ದುರಂತದತ್ತ ಕೊಂಡೊಯ್ಯುವ ನೀತಿಯನ್ನು ಜನರು ಮರೆತಿಲ್ಲ. ಸಿದ್ದರಾಮಯ್ಯ ಅವರು ನೀಡಿದ ಯಾವುದೇ ಹೇಳಿಕೆಗಳು ಎಂದಿಗೂ ನಿಜವಾಗಿಲ್ಲ. ಬಿಎಸ್ ಯಡಿಯೂರಪ್ಪ ಮತ್ತು ಎಚ್‌ಡಿ ಕುಮಾರಸ್ವಾಮಿ ಎಂದಿಗೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಇಬ್ಬರು ಮುಖ್ಯಮಂತ್ರಿಗಳಾಗಿದ್ದರು. 2018ರಲ್ಲಿ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿದ್ದರು, ಆದರೆ, ಅದೂ ಆಗಲಿಲ್ಲ ಎಂದು ವ್ಯಂಗ್ಯವಾಡಿದರು.

ಕರ್ನಾಟಕದಲ್ಲಿ ಇಷ್ಟು ಭ್ರಷ್ಟ ಸರ್ಕಾರವನ್ನು ಹಿಂದೆಂದೂ ಕಂಡಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು, ಈಗ ಕೇವಲ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸುಳ್ಳಿಗೆ ಸಮಾನಾರ್ಥಕವಾಗಿದೆ'' ಎಂದು ವಾಗ್ದಾಳಿ ನಡೆಸಿದರು.

ಹಿಂದುಳಿದ ವರ್ಗಗಳ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ, ಸಾಮಾಜಿಕ ನ್ಯಾಯವು ಅವರ ಭಾಷಣಗಳಿಗೆ ಕೇವಲ ಒಂದು ವಿಷಯವಾಗಿದೆ ಎಂದು ತಿಳಿಸಿದರು.

ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ವ್ಯಕ್ತವಾದ ಪ್ರತಿಕ್ರಿಯೆ ಕುರಿತು ಮಾತನಾಡಿ, ಮುಂದಿನ ಐದು ವರ್ಷಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳು ಬರಲಿವೆ ಎಂದರು.

ಇತ್ತೀಚಿನ ಜಾಗತಿಕ ಬಂಡವಾಳ ಹೂಡಿಕೆ ಮೂಲಕ ಬಂದ ಹೂಡಿಕೆಯಲ್ಲಿ ಹೆಚ್ಚಿನ ಪಾಲು ನವೀಕರಿಸಬಹುದಾದ ಇಂಧನ ವಲಯದಲ್ಲಿದೆ ಮತ್ತು ಆ ಯೋಜನೆಗಳು ಕರಾವಳಿ ಜಿಲ್ಲೆಗಳಲ್ಲಿ ಬರುತ್ತವೆ ಎಂದು ಮಾಹಿತಿ ನೀಡಿದರು.

“ಪ್ರಧಾನ ಮಂತ್ರಿ ಗತಿ ಶಕ್ತಿ - ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ, ಮಂಗಳೂರು ಮತ್ತು ಕಾರವಾರದ ಬಂದರುಗಳನ್ನು ಪ್ರಮುಖ ನಗರಗಳಿಗೆ ಸಂಪರ್ಕಿಸಲಾಗುತ್ತದೆ. ಕೇಂದ್ರ ಸರಕಾರವು ಬಂದರುಗಳ ಅಭಿವೃದ್ಧಿಗಾಗಿ ಸಾಗರ ಮಾಲಾ ಯೋಜನೆಯಡಿ 1,774 ಕೋಟಿ ರ  ಬಿಡುಗಡೆ ಮಾಡಿದೆ. ಇದು ಆರ್ಥಿಕ ಅಭಿವೃದ್ಧಿಗಾಗಿ ಸಿಆರ್‌ಝಡ್ ಮಾನದಂಡಗಳನ್ನು ಸಡಿಲಗೊಳಿಸಲಿದೆ ಎಂದು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ಉತ್ಪಾದನೆಯಾಗುವ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com