ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ): ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಶಿಡ್ಲಘಟ್ಟದಲ್ಲಿ ನಡೆದ ಪಕ್ಷದ ಪಂಚರತ್ನ ಯಾತ್ರೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಮ್ ಎಂದು ಕರೆಯುತ್ತದೆ... ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಬಿಜೆಪಿಯ ‘ಬಿ’ ಟೀಮ್ ಆಗಿದೆ ಎಂದು ಹೇಳಿದರು.
ಅಧಿಕಾರಕ್ಕೆ ಬಂದರೆ ಕರ್ನಾಟಕದ ಅಭಿವೃದ್ಧಿಗೆ ಪಕ್ಷದ ಬದ್ಧತೆಯನ್ನು ಪುನರುಚ್ಚರಿಸಿದ ಕುಮಾರಸ್ವಾಮಿ ಅವರು, ''ಜೆಡಿಎಸ್ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುತ್ತದೆ. ಅಗತ್ಯವಿರುವವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಾಗುವುದು ಮತ್ತು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಕರ್ನಾಟಕ ಶಾಂತಿಯುತ ರಾಜ್ಯವಾಗಿದ್ದು, ಶಾಂತಿ ಕದಡುವವರಿಗೆ ಅವಕಾಶ ನೀಡಬಾರದು ಎಂದರು.
ಬಳಿಕ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರವಿಕುಮಾರ್ ಸಿಡ್ಲಘಟ್ಟದಿಂದ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕೃಷಿ ಸಾಲ ಮನ್ನಾ ಮಾಡಿದ್ದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಗುವುದು. ಕೆಂಪೇಗೌಡ ವಿವಿ ಹಾಗೂ ಟಿಪ್ಪು ಸುಲ್ತಾನ್ ವಿವಿ ಸ್ಥಾಪಿಸುತ್ತೇವೆ ಎಂದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ಯಾತ್ರೆಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಜನರು ಆಶೀರ್ವಾದ ಮಾಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಆಶೀರ್ವಾದ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡುತ್ತೇನೆ...ಅವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ಆಡಳಿತ ನೀಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿಯವರೂ ಕೂಡ ಮಾತನಾಡಿದರು.
Advertisement