ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್: ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಕ್ಕರ್?

ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಚರ್ಚೆಗೆ ಅಂತ್ಯ ಹಾಡಿದ್ದಾರೆ.

ಅರ್ಜಿ ಆಹ್ವಾನ, ದೇಣಿಗೆ ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ, ಈ ಬಾರಿ ಹೆಚ್ಚು ಸದ್ದು ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ‘ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂದು ಹೇಳಿದ್ದಾರೆ.

ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು.

2019 ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com